ಆಗಸ್ಟ್ 5ರಂದು ಬಿಜೆಪಿಗೆ ಸೇರ್ಪಡೆಯಾಗಲಿರುವ ಶಾಸಕ ಎನ್.ಮಹೇಶ್
ಕೊಳ್ಳೇಗಾಲ: ಆಗಸ್ಟ್ 5ರಂದು ಅಧಿಕೃತವಾಗಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ ಎಂದು ಶಾಸಕ ಎನ್.ಮಹೇಶ್ ತಿಳಿಸಿದರು.
ಪಟ್ಟಣದ ಅತಿಥಿ ಗೃಹದಲ್ಲಿ ರವಿವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಹಾಗೂ ಶಾಸಕ ಎನ್.ಮಹೇಶ್ ಅವರು ಈ ವಿಷಯ ತಿಳಿಸಿದರು.
ಮಾಜಿ ಶಾಸಕ ಜಿ.ಎನ್ ನಂಜುಂಡಸ್ವಾಮಿ ಅವರು ಮಾತನಾಡಿ ಎನ್.ಮಹೇಶ್ ಸರ್ಕಾರದ ಜೊತೆ ಕೈಜೋಡಿಸಿ ಅನೇಕ ಜನಪರ ಕೆಲಸಗಳನ್ನೂ ಮಾಡಿದ್ದಾರೆ. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಸೇರುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಉತ್ತಮ ಒಡನಾಟ ಇಟ್ಟುಕೊಂಡಿದ್ದಾರೆ ಎಂದರು.
ರಾಜ್ಯ ಘಟಕದ ಅಧ್ಯಕ್ಷರು, ನಮ್ಮ ಸಂಸದರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಆಗಸ್ಟ್ 5ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಎಂದು ನಂಜುಂಡಸ್ವಾಮಿ ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬೆಂಬಲಿಗರಿಗೆ ಟಿಕೆಟ್ ಕೇಳುತ್ತೀರಾ ಎಂದು ಮಹೇಶ್ ಅವರನ್ನು ಪ್ರಶ್ನಿಸಿದಾಗ, ಆ ಬಗ್ಗೆ ಈಗ ಏನೂ ಹೇಳಲಾರೆ. ಪಕ್ಷದ ವರಿಷ್ಠರು ತೀರ್ಮಾನದಂತೆ ನಡೆದುಕೊಳ್ಳುತ್ತೇನೆ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಗಂಗಮ್ಮ, ಬಿಜೆಪಿ ಟೌನ್ ಘಟಕದ ಅಧ್ಯಕ್ಷ ಲಕ್ಷ್ಮಿಪತಿ , ಸೆಲ್ವರಾಜ್ , ನಾಸೀರ್ ಷರೀಪ್,ಸದಸ್ಯ ಮಧುಸೂಧನ್ ,ಸೋಮಣ್ಣ, ಜಿ.ಪಿ.ಶಿವಕುಮಾರ್, ಮುಖಂಡ ಜಕಾವುಲ್ಲಾ, ಮಹದೇವಸ್ವಾಮಿ ಇತರರು ಇದ್ದರು.