ಉಡುಪಿ ಜಿಲ್ಲೆಯಲ್ಲಿ ಮಾರ್ಚ್ನಿಂದ ಜೂನ್ವರೆಗೆ 8 ತಾಯಿ, 52 ಶಿಶು ಮರಣ: ಡಿಸಿ ಜಿ. ಜಗದೀಶ್
‘ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ’

ಉಡುಪಿ, ಆ.6: ಶಿಶು ಮತ್ತು ತಾಯಿ ಮರಣ ಸಂಖ್ಯೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಗರ್ಭಿಣಿಯರಿಗೆ ತಾಯಿ ಕಾರ್ಡ್ ನೀಡುವುದರೊಂದಿಗೆ, ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಶಿಶು ಮತ್ತು ತಾಯಿ ಮರಣ ನಿಯಂತ್ರಣ ಹಾಗೂ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸರಕಾರ ಶಿಶು ಹಾಗೂ ತಾಯಿ ಮರಣ ಪ್ರಮಾಣ ತಡೆಗಟ್ಟಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದರೂ ಸಹ ಲಾಕ್ ಡೌನ್ ಅವಧಿಯಲ್ಲಿ ಶಿಶು ಮತ್ತು ತಾಯಿ ಮರಣ ಪ್ರಮಾಣವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ. ಕೊರೋನ ಸೋಂಕಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಇತರೆ ಸಾಮಾನ್ಯ ಕಾಯಿಲೆ ಹಾಗೂ ಗರ್ಭಿಣಿಯರ ಪರೀಕ್ಷೆಗೆ ಒತ್ತು ನೀಡಬೇಕು ಎಂದವರು ಹೇಳಿದರು.
52 ಶಿಶು ಮರಣ : ಜಿಲ್ಲೆಯಲ್ಲಿ ಮಾರ್ಚ್ನಿಂದ ಜೂನ್ವರೆಗೆ 8 ತಾಯಿ ಮರಣ ಹಾಗೂ ಫೆಬ್ರವರಿಯಿಂದ ಜೂನ್ವರೆಗೆ ಒಟ್ಟು 52 ಶಿಶು ಮರಣ ಪ್ರಕರಣಗಳು ದಾಖಲಾಗಿವೆ ಎಂದ ಜಿಲ್ಲಾಧಿಕಾರಿ, ಅರಿವಿನ ಕೊರತೆ, ಸಮಯಕ್ಕೆ ಸರಿಯಾಗಿ ಸಿಗದ ಅರೋಗ್ಯ ವೈದ್ಯಕೀಯ ಸೇವೆ, ಕಡಿಮೆ ತೂಕ, ಅಪೌಷ್ಠಿಕತೆ, ಹೃದಯ ಸಂಬಂಧಿ ಸಮಸ್ಯೆ, ಅವಧಿಗೆ ಮುಂಚೆ ಹೆರಿಗೆ ಸೇರಿದಂತೆ ಅನೇಕ ಕಾರಣಗಳಿಂದ ತಾಯಿ ಮತ್ತು ಶಿಶು ಮರಣಗಳು ಹೆಚ್ಚಾಗುವ ಸಾಧ್ಯತೆ ಇವೆ. ಮುಂದೆ ಹೀಗಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಯಿ-ಮಗುವಿನ ಮರಣವು ಆಕಸ್ಮಿಕವಲ್ಲದೇ, ವೈದ್ಯರುಗಳ ನಿರ್ಲಕ್ಷ್ಯದಿಂದ ಉಂಟಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಪ್ರಾರಂಭದಿಂದ ಕೊನೆಯ ತನಕ ನೀಡಿರುವ ಚಿಕಿತ್ಸೆಯ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಿಂದ ಗರ್ಭಿಣಿ ಮಹಿಳೆಯರಿಗೆ ನೀಡುವ ಸರಕಾರದ ಯೋಜನೆ ಗಳನ್ನು ತಲುಪಿಸುವ ಕಾರ್ಯವನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮಾಡಬೇಕು. ಜೊತೆಗೆ ಅವರಿಗೆ ಉತ್ತಮ ಆರೋಗ್ಯವನ್ನು ಕಾಪಾಡಲು ಸಲಹೆಗಳನ್ನು ನೀಡಬೇಕು. ಮಕ್ಕಳಿಗೆ ನಿಗದಿತ ಕಾಲಾವಧಿಯಲ್ಲಿ ಸಾಮಾನ್ಯ ಚುಚ್ಚುಮದ್ದು ನೀಡುವ ಕಾರ್ಯಕ್ರಮಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಲಸಿಕೆ: ಕೋವಿಡ್ ಲಸಿಕೆಯನ್ನು ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಪ್ರದೇಶಗಳಲ್ಲಿನ ಜನರಿಗೆ, ಗರ್ಭಿಣಿ ಸ್ತ್ರೀಯರಿಗೆ, ಅಪೌಷ್ಠಿಕತೆ ಹೊಂದಿರುವವರಿಗೆ, ಎಂಡೋಸಲ್ಫಾನ್ ಪೀಡಿತರಿಗೆ ಆದ್ಯತೆ ಮೇಲೆ ನೀಡಬೇಕೆಂದು ಸೂಚನೆ ನೀಡಿದರು.
ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳ ಮಹತ್ವಕಾಂಕ್ಷೆಯ ಕಾರ್ಯಕ್ರಮವಾದ ‘ವಾತ್ಸಲ್ಯ’ ಯೋಜನೆ ಯಡಿ, ಮಕ್ಕಳ ಆರೋಗ್ಯ ತಪಾಸಣೆಯನ್ನು ಜಿಲ್ಲೆಯ ಪ್ರತಿಯೊಬ್ಬ ಮಕ್ಕಳಿಗೂ ಮಾಡುವ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಗತ್ಯ ಸಹಕಾರ ನೀಡಬೇಕೆಂದು ಅವರು ಸಂಬಂಧಿತರಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಗರ್ಭಿಣಿಯರನ್ನು ನಿಯಮಿತವಾಗಿ ಪರೀಕ್ಷೆ ಮಾಡುವಾಗ ಅವರಿಗೆ ರಕ್ತದೊತ್ತಡ, ಮಾನಸಿಕ ಒತ್ತಡ ಸೇರಿದಂತೆ ಇತರ ಕಾಯಿಲೆಗಳು ಇರುವ ಬಗ್ಗೆ ತಪ್ಪದೇ ಪರಿಶೀಲಿಸಬೇಕು. ಒಂದೊಮ್ಮೆ ಇದ್ದಲ್ಲಿ ಅವರಿಗೆ ಪ್ರಾರಂಭಿಕ ಹಂತದಿಂದಲೇ ಚಿಕಿತ್ಸೆ ಹಾಗೂ ಸಮಾಲೋಚನೆಗಳನ್ನು ಕೈಗೊಳ್ಳುವುದರಿಂದ ಕೊನೆಯ ಹಂತದಲ್ಲಿ ಆರೋಗ್ಯ ತೊಂದರೆ ಉಂಟಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.
ವಾತ್ಸಲ್ಯ ಯೋಜನೆಯಡಿ ಮಕ್ಕಳ ತಪಾಸಣಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಶೇ.65.73ರಷ್ಟು ಶಾಲೆಗಳು, ಶೇ.77.31ರಷ್ಟು ಅಂಗನವಾಡಿ ಗಳಲ್ಲಿ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಗಿದೆ ಎಂದ ಅವರು, ಪೋಷಕರು ಮಕ್ಕಳನ್ನು ಆರೋಗ್ಯ ತಪಾಸಣೆಗೆ ತಪ್ಪದೇ ಕರೆ ತರಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ನಗರಸಭೆ ಅದ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಲಸಿಕೆ ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.








