18,414 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಸಚಿವ ಬಿ.ಸಿ. ನಾಗೇಶ್
ಆ.19ರಿಂದ ಸೆ.3ರವರೆಗೆ ವ್ಯವಸ್ಥಿತ- ದೋಷರಹಿತವಾಗಿ ಪರೀಕ್ಷೆ ನಡೆಸಲು ಸಿದ್ಧತೆ

ಬೆಂಗಳೂರು, ಆ. 13: `ಫಲಿತಾಂಶವನ್ನು ತಿರಸ್ಕರಿಸಿರುವ ದ್ವಿತೀಯ ಪಿಯುಸಿಯ ಒಟ್ಟು 18,414 ವಿದ್ಯಾರ್ಥಿಗಳು ಆಗಸ್ಟ್ 19ರಿಂದ ಸೆಪ್ಟೆಂಬರ್ 3ರ ವರೆಗೆ ನಡೆಯುವ ವಾರ್ಷಿಕ ಪರೀಕ್ಷೆ ಹಾಜರಾಗಲಿದ್ದಾರೆ. ಕೋವಿಡ್ ಮಾರ್ಗಸೂಚಿ ಅನುಸರಿಸಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಅಗತ್ಯ ಸೂಚನೆ ನೀಡಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಪರೀಕ್ಷೆಗಳ ಸಂಬಂಧ ಸಮಾಲೋಚನೆ ನಡೆಸಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಒಟ್ಟು 5,546 ಕಾಲೇಜುಗಳಿಂದ 18,414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಆಗಸ್ಟ್ 17ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ. ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕ ಸ್ನೇಹಲ್ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಮಾಲೋಚನೆ ನಡೆಸಿ ಪರೀಕ್ಷೆ ಸಿದ್ದತೆ ಸಂಬಂಧ ಸಲಹೆ-ಸೂಚನೆ ನೀಡಿದರು.







