ಸ್ವಾತಂತ್ರ್ಯೋತ್ಸವ ಹಿನ್ನೆಲೆ: ಬೆಂಗಳೂರಿನಾದ್ಯಂತ ಹೈಅಲರ್ಟ್

ಬೆಂಗಳೂರು, ಆ.13: ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ನಗರ ಪೊಲೀಸರು ಈಗಾಗಲೇ ಬೆಂಗಳೂರಿನಾದ್ಯಂತ ತಪಾಸಣಾ ಕಾರ್ಯಗಳನ್ನು ಆರಂಭಿಸಿದ್ದಾರೆ. ನಗರದ ಎಲ್ಲ ವಿಭಾಗಗಳಲ್ಲೂ ಬಾಂಬ್ ಪತ್ತೆದಳ, ಶ್ವಾನ ದಳಗಳನ್ನು ಬಳಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಗುಪ್ತದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಗಲುರಾತ್ರಿ ಗಸ್ತು ತಿರುಗುತ್ತಿದ್ದು, ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾವಹಿಸಿದ್ದಾರೆ. ಜೊತೆಗೆ ಸಾರ್ವಜನಿಕರೂ ಕೂಡ ಪೊಲೀಸರಜೊತೆ ಸಹಕರಿಸಬೇಕು. ತಮ್ಮ ಸುತ್ತಮುತ್ತ ಕಂಡುಬರುವ ಅನುಮಾನಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕಂಡುಬಂದರೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಮಾಲ್ಗಳು, ಬಸ್ ನಿಲ್ದಾಣಗಳು, ಪಾರ್ಕ್, ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಹಾಗೂ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣಾ ಕಾರ್ಯಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿನ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮೇಲೆ ನಿಗಾವಹಿಸಿದ್ದು, ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ.
ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯು 75ನೆ ವರ್ಷವಾಗಿದ್ದು ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.







