'ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಚಿಂತನೆ'
ಉಡುಪಿ: ಸ್ವಾತಂತ್ರ್ಯೋತ್ಸವ ಸಂದೇಶದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್
![ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಚಿಂತನೆ ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಚಿಂತನೆ](https://www.varthabharati.in/sites/default/files/images/articles/2021/08/15/302685-1629008584.jpeg)
ಉಡುಪಿ, ಆ.15: ರಾಜ್ಯದಲ್ಲಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡದೆ ಪರಿಸರ ಸ್ನೇಹಿಯಾದ ಸೋಲಾರ್ ಮತ್ತು ವಿಂಡ್ ವಿದ್ಯುತ್ ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸುವ ಚಿಂತನೆಯನ್ನು ಮಾಡಲಾಗಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ರವಿವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಅವರು ಸಂದೇಶವನ್ನು ನೀಡಿದರು.
ಗ್ರಾಹಕರು, ರೈತರು, ಉದ್ಯಮಿಗಳಿಗೆ ಒಳಿತನ್ನು ಬಯಸುವ ಜನಸ್ನೇಹಿಯಾದ ಇಂಧನ ಖಾತೆಯನ್ನು ಎರಡು ವರ್ಷ ನಿರ್ಮಾಣಮಾಡುವ ಕಲ್ಪನೆ ನಮ್ಮ ಮುಂದೆ ಇದೆ. ರಾಜ್ಯದಲ್ಲಿ ರೆಷನ್ ಕಾರ್ಡ್ ಹೊಂದಿರುವ ಎಲ್ಲ ಮನೆಗಳಿಗೆ ಬೆಳಕು ನೀಡುವ ಉದ್ದೇಶವನ್ನು ಹೊಂದಿದ್ದು, ಈ ಬಗ್ಗೆ ಅತ್ಯಂತ ಶೀಘ್ರದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ನೀತಿ
ಎಲ್ಲ ಇಲಾಖೆಗಳಲ್ಲೂ ಅದರದ್ದೆ ಆದ ನೀತಿಗಳಿವೆ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಈವರೆಗೆ ಯಾವುದೇ ನೀತಿ ಎಂಬುದು ಇಲ್ಲ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲೂ ಹೊಸ ನೀತಿ ತಯಾರಿಸಲು ಹಿರಿಯ ಸಮಿತಿಯನ್ನು ರಚನೆ ಮಾಡಲಾಗುವುದು. ಸಮಿತಿಯ ವರದಿಯಂತೆ ಮುಂದೆ ಕನ್ನಡ ಮತ್ತು ಸಂಸ್ಕೃತಿಗೆ ಸಂಬಂಧಪಟ್ಟ ನೀತಿಯನ್ನು ರೂಪಿಸಲಾಗುವುದು ಎಂದು ಅವರು ಹೇಳಿದರು.
ಯಕ್ಷಗಾನಕ್ಕೆ ವಿಶೇಷ ಪ್ರೋತ್ಸಾಹ ನೀಡಲಾಗುವುದು. ತುಳು ಭಾಷೆಯನ್ನು ಎಂಟನೇ ಪರಿಚ್ಛೇಧಕ್ಕೆ ಸೇರಿಸುವ ಪ್ರಯತ್ನ ಮಾಡಲಾಗುವುದು. ನೂರಾರು ಮಂದಿಯ ಬಲಿದಾನದೊಂದಿಗೆ ಸ್ವಾತಂತ್ರ ಚಳವಳಿ ನಡೆದ ಸುಳ್ಯದ ಉಬ್ಬಡ್ಕ ಮಿತ್ತೂರು ಎಂಬ ಗ್ರಾಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಪಾರಂಪರಿಕ ಗ್ರಾಮವನ್ನಾಗಿ ಘೋಷಿಸಲಾಗುವುದು. ಅಲ್ಲಿ ಹುತಾತ್ಮ ಸ್ಮಾರಕವನ್ನು ನಿರ್ಮಾಣ ಮಾಡುವ ಯೋಚನೆ ಹೊಂದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಎಸ್ಪಿ ನಿಖಿಲ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.