2 ವಾರದಲ್ಲಿ ಪಾಸಿಟಿವ್ ಪ್ರಮಾಣ ಶೇ.1ಕ್ಕಿಂತ ಕಡಿಮೆಗೊಳಿಸುವ ಗುರಿ: ಡಿಸಿ ಕೂರ್ಮಾ ರಾವ್

ಉಡುಪಿ, ಸೆ.4: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಎರಡು ವಾರಗಳ ಒಳಗೆ ಶೇ.1ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ನಿಯಂತ್ರಣ ಕ್ರಮ ಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾಗಿರುವ ವಿವಿಧ ಕಾರ್ಯಪಡೆ ತಂಡಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಸೂಚಿಸಿದ್ದಾರೆ.
ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್ ನಿಯಂತ್ರಣಾ ಕ್ರಮಗಳ ಅನುಷ್ಠಾನಕ್ಕೆ ರಚಿಸಿರುವ ವಿವಿಧ ಅಧಿಕಾರಿ ಗಳ ತಂಡದ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಕೋವಿಡ್ನಿಂದ ಅಪಾಯವಿಲ್ಲ, ಇದರ ಹರಡುವಿಕೆ ಕಡಿಮೆಯಾಗಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಕಂಡು ಬರುತ್ತಿದೆ.ಸಭೆ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದಿರುವುದು ಹಾಗೂ ಮಾಸ್ಕ್ ಧರಿಸದೇ ಇರುವುದು ಎಲ್ಲೆಡೆ ಕಂಡುಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಮಾಸ್ಕ್ ಧರಿಸದೇ ಇರುವುದು, ಸುರಕ್ಷತಾ ಅಂತರ ಪಾಲನೆಯಾಗದ ಸ್ಥಳಗಳಲ್ಲಿ ಸಂಬಂಧ ಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಂಡವನ್ನು ವಿಧಿಸಬೇಕು ಎಂದರು.
ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನಗರಸಭೆ, ಪುರಸಭೆ, ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮಾಸ್ಕ್ ಜಾಗೃತಿ ಮೂಡಿಸಲು ಅಭಿಯಾನ ಆಯೋಜಿಸಿ, ದಂಡ ವಿಧಿಸಿ. ಜಿಲ್ಲೆಯಲ್ಲಿ ಕೋವಿಡ್ ಶೂನ್ಯ ಪ್ರಕರಣಗಳು ಬರುವವರೆಗೂ ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಕಾರ್ಯಕ್ರಮ ಉತ್ತಮವಾಗಿದ್ದು, ಈಗಾಗಲೇ ಒಟ್ಟು ಶೇ.79ರಷ್ಟು ಲಸಿಕೆ ನೀಡಿದ್ದು, ಲಸಿಕಾ ಕಾರ್ಯಕ್ರಮಕ್ಕೆ ಇನ್ನಷ್ಟು ವೇಗ ನೀಡಿ ಜಿಲ್ಲೆಯಲ್ಲಿ ಶೇ.100 ಗುರಿ ಸಾಧಿಸಬೇಕು. ಜನಪ್ರತಿನಿಧಿಗಳು ಮತ್ತು ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳ ಸಹಕಾರ ಪಡೆದು, ಲಸಿಕಾ ಮಹಾಮೇಳ ಕಾರ್ಯಕ್ರಮದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪುರಸಭೆ ಮತ್ತು ನಗರಸಭೆ ವ್ಯಾಪ್ತಿಗಳಲ್ಲಿ ವಾರ್ಡ್ ಟಾಸ್ಕ್ಫೋರ್ಸ್ ಮೂಲಕ ಸಾರ್ವಜನಿಕರಿಗೆ ಲಸಿಕೆ ವಿತರಿಸಿ. 100ಕ್ಕಿಂತ ಹೆಚ್ಚು ಅಸಂಘಟಿತ ವಲಯದ ಕಾರ್ಮಿಕರಿಗೆ ಅವರು ಕೆಲಸ ನಿರ್ವಹಿಸುವ ಸ್ಥಳದಲ್ಲಿಯೇ ಶಿಬಿರ ಆಯೋಜಿಸಿ ಲಸಿಕೆ ನೀಡಿ. ಮೀನುಗಾರರಿಗೆ ವಿಶೇಷ ಅಭಿಯಾನದ ಮೂಲಕ ಲಸಿಕೆ ನೀಡಬೇು ಎಂದು ಸಲಹೆ ನೀಡಿದರು.
ಕೋವಿಡ್ ನಿಯಂತ್ರಣದ ಉದ್ದೇಶದಿಂದ ವಿವಿಧ ದಾನಿಗಳು ಜಿಲ್ಲಾಡಳಿತಕ್ಕೆ ನೀಡಿರುವ ಅಂಬುಲೆನ್ಸ್ ವಾಹನಗಳಿಗೆ ಸಂಬಂಧಪಟ್ಟ ದಾಖಲೆ ಪತ್ರಗಳಿಗೆ ಶೀಘ್ರದಲ್ಲಿ ಅನುಮತಿಯನ್ನು ನೀಡಿ. ವಾಹನಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಲ್ಲೂರಲ್ಲಿ ತಪಾಸಣಾ ಕೇಂದ್ರ: ಜಿಲ್ಲೆಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಪರಿಶೀಲಿಸಿ. ಕೇರಳದಿಂದ ಬರುವವರನ್ನು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಬೇಕು.
ಕೊಲ್ಲೂರು ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೇರಳದಿಂದ ಪ್ರವಾಸಿಗರು ಆಗಮಿಸುತಿದ್ದು, ಅಲ್ಲಿ ಪ್ರತ್ಯೇಕ ಕೋವಿಡ್ ತಪಾಸಣಾ ಕೇಂದ್ರ ಆರಂಭಿಸಿ ಪರಿಶೀಲನೆ ನಡೆಸಬೇಕು ಮತ್ತು ಅಗತ್ಯಬಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲು ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ತೆರೆಯಬೇಕು. ಕೊಲ್ಲೂರು ಪ್ರವೇಶ ದ್ವಾರದಲ್ಲಿ ಮತ್ತು ದೇವಸ್ಥಾನದ ವೆಬ್ಸೈಟ್ನಲ್ಲಿ ಕನ್ನಡ, ಮಲೆಯಾಳಂ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಗೊಳಿಸಿರುವ ಬಗ್ಗೆ ಮಾಹಿತಿಯನ್ನು ಅಳವಡಿಸಿ ಎಂದರು.
ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 9000ಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಯುತ್ತಿದ್ದು, ಇದನ್ನು ಇನ್ನಷ್ಟು ಹೆಚ್ಚು ಮಾಡಬೇಕು. ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕೋವಿಡ್ ಕೇರ್ ಸೆಂಟರ್ಗೆ ವರ್ಗಾಯಿಸುವ ಪ್ರಮಾಣವನ್ನು ಹೆಚ್ಚು ಮಾಡಬೇಕು. ಈ ಕಾರ್ಯಕ್ಕೆ ಅಗತ್ಯದ್ದಲ್ಲಿ ಪೊಲೀಸ್ ಸಹಕಾರ ಪಡೆಯು ವಂತೆ ತಿಳಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಹೆಚ್ಚು ಪಾಸಿಟಿವ್ ಬಂದಲ್ಲಿ ಕಂಟೋನ್ಮೆಂಟ್ ಝೋನ್ ಗಳನ್ನು ರಚಿಸುವಂತೆ ತಿಳಿಸಿದರು.
ಸಭೆಯಲ್ಲಿ ಎಸ್ಪಿ ಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಹಾಗೂ ಕೋವಿಡ್ ನಿಯಂತ್ರಣ ಕ್ರಮಗಳ ಅನುಷ್ಠಾನ ಕುರಿತು ರಚಿಸಿರುವ ವಿವಿಧ ಅಧಿಕಾರಿಗಳ ತಂಡದ ಮುಖ್ಯಸ್ಥರು ಉಪಸ್ಥಿತರಿದ್ದರು.







