ಕೋವಿಡ್ ತಪಾಸಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಕ್ರಮ: ಸಚಿವ ಅಂಗಾರ

ಮಂಗಳೂರು, ಸೆ.6: ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿ ಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು. ಸೂಚನೆ ತಪ್ಪಿದ್ದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿರ್ಬಂಧಗಳ ಕುರಿತ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊರೋನ ಸೋಂಕು ನಿಯಂತ್ರಿಸುವಿಕೆಯಲ್ಲಿ ಹೆಚ್ಚಿನ ತಪಾಸಣೆ ಅತಿ ಅಗತ್ಯ. ಈ ದಿಸೆಯಲ್ಲಿ ಜಿಲ್ಲಾ ಹಾಗೂ ತಾಲೂಕುಗಳ ಆರೋಗ್ಯ ಅಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಕೋವಿಡ್ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಯನ್ನು ತುರ್ತಾಗಿ ನಡೆಸಬೇಕು. ಇಲ್ಲಿ ನಿರ್ಲಕ್ಷ್ಯ ಮಾಡಬಾರದು. ಮಾಡಿದ್ದಲ್ಲಿ ಸಂಬಂಧಿಸಿ ತಾಲೂಕುಗಳ ಆರೋಗ್ಯಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಅವರು ನೀಡಿದರು.
ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಸಚಿವರ ಸೂಚನೆಯಂತೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು. ಅದನ್ನು ಶೇ.100ರಷ್ಟು ಕಾರ್ಯಗತಗೊಳ್ಳಬೇಕು. ಇದನ್ನು ತಹಶೀಲ್ದಾರ್ ಹಾಗೂ ತಾಪಂ ಇಒಗಳು ಮೇಲುಸ್ತುವಾರಿ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಗ್ರಾಮ ಮಟ್ಟದಲ್ಲಿರುವ ಕೋವಿಡ್ ಪಾಸಿಟಿವಿಟಿ ಸೂಚ್ಯಂಕದ ಬಗ್ಗೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳು ಪಟ್ಟಿ ಒದಗಿಸುವಂತೆ ಅವರು ಸೂಚಿಸಿದರು.
ಸೆ.8ರಂದು ಲಕ್ಷ ಲಸಿಕಾ ಮೇಳ: ಜಿಲ್ಲೆಯಲ್ಲಿ ಸೆ.8ರಂದು ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಯೊಂದಿಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದರು.
ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. 18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರಿಕರು ಇದರ ಸದುಪಯೋಗ ಪಡೆಯುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕರೆ ನೀಡಿದರು.
ಜಿಲ್ಲೆಯಲ್ಲಿ ಪಾಸಿಟಿವಿಟಿ ಸೂಚ್ಯಂಕ ಕಡಿಮೆ ಮಾಡಲು ಸರಕಾರ ಹೊರಡಿಸಿರುವ ಮಾರ್ಗಸೂಚಿಗಳಂತೆ ಈ ಬಾರಿಯೂ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಜಿಲ್ಲೆಯ ಜನತೆ ಆಚರಿಸುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಜಿಲ್ಲೆಯ ಜನತೆಗೆ ಕರೆ ನೀಡಿದರು.
ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಪಂ ಸಿಇಒ ಡಾ.ಕುಮಾರ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉಪ ವಿಭಾಗಾಧಿಕಾರಿ ಮದನ್ ಮೋಹನ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.







