ಸೆ.17ರಂದು ಉಡುಪಿ ಜಿಲ್ಲೆಯಲ್ಲಿ 80 ಸಾವಿರ ಲಸಿಕೆ ನೀಡುವ ಗುರಿ: ಡಿಸಿ ಕೂರ್ಮಾ ರಾವ್

ಉಡುಪಿ, ಸೆ.15: ರಾಜ್ಯದಲ್ಲಿ ನವೆಂಬರ್ 30 ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೇ.100 ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆ.17ರಂದು 80 ಸಾವಿರ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದ್ದಾರೆ.
ಉಡುಪಿ ಜಿಪಂ ಸಭಾಂಗಣದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಲಸಿಕಾ ಮಹಾಮೇಳದಲ್ಲಿ ಭಾಗವಹಿಸಿ ಲಸಿಕೆ ಪಡೆಯಬೇಕು. ಅದಕ್ಕಾಗಿ ಗ್ರಾಪಂ ಮತ್ತು ನಗರ ವ್ಯಾಪ್ತಿಯಲ್ಲಿ 300 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.
ಎಲ್ಲಾ ಸಮುದಾಯಗಳ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಲಸಿಕಾ ಮಹಾಮೇಳವನ್ನು ಏರ್ಪಡಿಸಲಾಗಿದೆ. ಇದರಲ್ಲಿ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು, ಆಯುಷ್ ವೈದ್ಯರು, ಆರೋಗ್ಯ ಸಹಾಯಕರು ಮತ್ತು ಕಾರ್ಯ ಕರ್ತರು, ಅಂಗನವಾಡಿ, ಆಶಾ ಕಾರ್ಯಕರ್ತರು, ಎಲ್ಲಾ ಟಾಸ್ಕ್ ಪೋರ್ಸ್ ಸಮಿತಿಗಳ ಸದಸ್ಯರು, ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕ ಸಿಬ್ಬಂದಿ, ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಪಾಲ್ಗೊಳ್ಳಲಿರುವರು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು 10,02,762 ಗುರಿ ಇದ್ದು, ಇದುವರೆಗೆ 8,471940 (ಶೇ.84.6) ಮಂದಿಗೆ ಮೊದಲ ಡೋಸ್ ಲಸಿಕೆ ನೀಡಿದ್ದು, ಇದರಲ್ಲಿ 3,45,558 (ಶೇ.34.5) ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಾರ್ವಜನಿಕರಿಗೆ ಲಸಿಕೆ ಪಡೆಯುವ ಕುರಿತಂತೆ ಇರುವ ಯಾವುದೇ ಪ್ರಶ್ನೆ ಮತ್ತು ಸಂದೇಹಗಳನ್ನು ಪರಿಹರಿಸಲು ಸೆ.16 ರಂದು ಬೆಳಗ್ಗೆ 10 ರಿಂದ 11ರ ವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊ.ಸಂಖ್ಯೆ. 9663957222ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
ಮೂರು ಗ್ರಾಪಂಗಳಲ್ಲಿ ಶೇ.100 ಲಸಿಕಾಕರಣ
ಉಡುಪಿ ಜಿಲ್ಲೆಯ ಕಾವ್ರಾಡಿ, ಬಳ್ಕೂರು ಮತ್ತು ಕಾಡೂರು ಗ್ರಾಮ ಪಂಚಾಯತ್ ಗಳಲ್ಲಿ ಶೇ.100 ಮೊದಲ ಡೋಸ್ ಲಸಿಕಾಕರಣ ಪೂರ್ಣಗೊಂಡಿದ್ದು, ಉಳಿದ ಗ್ರಾಪಂಗಳಲ್ಲಿ ಸಂಪೂರ್ಣ ಗುರಿ ಸಾಧನೆ ಕಾರ್ಯ ನಡೆಯುತ್ತಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ತಿಳಿಸಿದ್ದಾರೆ.
ಸೆ.17ರಂದು ನಡೆಯುವ ಲಸಿಕಾ ಮಹಾಮೇಳದಲ್ಲಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಶೇ.100 ಲಸಿಕೆ ನೀಡಲು ಯೋಜನೆ ರೂಪಿಸಿದ್ದು, ಗ್ರಾಮದಲ್ಲಿನ 100-200 ಮನೆಗಳಿಗೆ ಒಬ್ಬ ನೋಡೆಲ್ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅವರಿಗೆ ಈವರೆಗೆ ಲಸಿಕೆ ಪಡೆಯದ ಸಾರ್ವಜನಿಕರನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಕೊಡಿಸುವ ಜವಾಬ್ದಾರಿ ವಹಿಸಲಾಗಿದೆ ಎಂದರು.







