ಪುತ್ತೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ
![ಪುತ್ತೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ಪುತ್ತೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ](https://www.varthabharati.in/sites/default/files/images/articles/2021/09/17/306762-1631855506.jpg)
ಪುತ್ತೂರು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಗುರುವಾರ ಸಂಜೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರಿನ ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಗೆ ಮೊದಲು ಅನುಮತಿ ರಹಿತವಾಗಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂಬ ವಿಚಾರದಲ್ಲಿ ಪೊಲೀಸರು ತಡೆದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕೆಲ ಕಾಲ ಮಾತಿನ ಚಕಮಕಿಯೂ ನಡೆಯಿತು. ನಗರದ ಕೋರ್ಟ್ ರಸ್ತೆಯಿಂದ ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಬರಲಾರಂಭಿಸಿದಾಗ ಅನುಮತಿ ಪಡೆದುಕೊಂಡಿಲ್ಲ ಎಂದು ಪೊಲೀಸರು ಮೆರವಣಿಗೆಯನ್ನು ತಡೆದರು. ಈ ವೇಳೆ ಮಾತಿನ ಚಕಮಕಿ ನಡೆದಿದ್ದು ಬಳಿಕ ಮೆರವಣಿಗೆ ಮುಂದುವರೆಯಿತು.
ಈ ಸಂದರ್ಭ ಮಾತನಾಡಿದ ಸಿಎಫ್ಐ ಬಂಟ್ವಾಳ ತಾಲೂಕು ಅಧ್ಯಕ್ಷ ಅಶ್ಫಾಕ್ ಬಂಟ್ವಾಳ್ ನಮ್ಮ ಹೋರಾಟವನ್ನು ಪೊಲೀಸರ ಲಾಠಿಗಳಿಂದ ಅಥವಾ ಬೂಟುಗಾಲಿನಿಂದ ತಡೆಯಲು ಸಾಧ್ಯವಾಗದು. NEP ಹಿಂಪಡೆಯುವವರೆಗೂ ಈ ಹೋರಾಟವನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದರು.
ಪ್ರಾಸ್ತಾವಿಕ ಭಾಷಣ ಮಾಡಿದ ಸಿಎಫ್ಐ ಜಿಲ್ಲಾ ಕಾರ್ಯದರ್ಶಿ ಮುಸ್ತಾಫಾ ಕೊಡಿಪ್ಪಾಡಿ ಮಾತನಾಡಿ ಬೆಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷ ಅನ್ಸಾರ್ ಬೆಳ್ಳಾರೆ, ಸದಸ್ಯರಾದ ಶಮ್ಮಾಶ್ ಬನ್ನೂರು, ಫಾರೂಕ್ ಕಟ್ಟತ್ತಾರ್, ಸಂಟ್ಯಾರ್ ಏರಿಯಾ ಅಧ್ಯಕ್ಷರಾದ ಆರಿಫ್ ಬೆಟ್ಟಪಾಡಿ, ಕಾರ್ಯದರ್ಶಿ ಸಫೀರ್ ಕಲ್ಲಾರ್ಪೆ, ಪುತ್ತೂರು ನಗರ ವಲಯ ಕಾರ್ಯದರ್ಶಿ ಅಪ್ರಾಜ್ ಪರ್ಲಡ್ಕ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಫಾರೂಕ್ ಕಬಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.