ಮನೆಯ ಹಿರಿಯ ನಾಗರಿಕರನ್ನು ನಿರ್ಲಕ್ಷಿಸಬೇಡಿ: ರಘುಪತಿ ಭಟ್

ಉಡುಪಿ, ಅ.1: ಕುಟುಂಬದಲ್ಲಿ ಹಾಗೂ ಸಮಾಜದಲ್ಲಿರುವ ಹಿರಿಯ ನಾಗರಿಕರನ್ನು ನಿರ್ಲಕ್ಷಿಸದೇ, ಅವರನ್ನು ಗೌರವದಿಂದ ನೋಡಿಕೊಳ್ಳುವ ವಾತಾವರಣವನ್ನು ಸೃಷ್ಟಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಶುಕ್ರವಾರ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಸ್ಪತ್ರೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ ಉಡುಪಿ, ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.
ಹಿರಿಯ ನಾಗರಿಕರು ಜೀವನದಲ್ಲಿ ಸಾಕಷ್ಟು ಸಂಕಷ್ಠ ಮತ್ತು ಸಂಘರ್ಷಗಳನ್ನು ಎದುರಿಸಿ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಕೊಡುಗೆ ನೀಡಿರುತ್ತಾರೆ. ಅವರನ್ನು ಗೌರವದಿಂದ ಕಾಣುವುದು ಅತ್ಯಂತ ಅಗತ್ಯ. ಹಿರಿಯ ನಾಗರಿಕರಿಗೆ ಗೌರವ ನೀಡದವರಿಗೆ, ಸಮಾಜವೂ ಗೌರವ ನೀಡುವುದಿಲ್ಲ ಎಂಬ ವಾತಾವರಣವನ್ನು ನಿರ್ಮಿಸಬೇಕಿದೆ. ಅವರಿಗೆ ಸಹಾಯಕ್ಕಿಂತ ಹೆಚ್ಚು ಪ್ರೀತಿ ತೋರಿಸಬೇಕಿದೆ ಎಂದು ರಘುಪತಿ ಭಟ್ ಹೇಳಿದರು.
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಮಾತನಾಡಿ, ಹಿರಿಯ ನಾಗರಿಕರಿಗೆ ವಯಸ್ಸು ಎಂಬುದು ಒಂದು ಸಂಖ್ಯೆ ಮಾತ್ರ, ಮನಸ್ಸಿಗೆ ವಯಸ್ಸು ಸಮಸ್ಯೆ ಯಾಗುವುದಿಲ್ಲ. ಕುಟುಂಬ ಮತ್ತು ಸಮಾಜ ಹಿರಿಯರಿಗೆ ಆತ್ಮಾಭಿಮಾನ ಮತ್ತು ಗೌರವ ದೊರೆಯುವಂತೆ ನೋಡಿಕೊಳ್ಳಬೇಕು. ಉಡುಪಿಯಲ್ಲಿ ಹಿರಿಯ ನಾಗರಿಕರಿಗೆ ‘ಡೇ-ಕೇರ್ ಸೆಂಟರ್’ ಆರಂಭಿಸುವ ಬಗ್ಗೆ ಪ್ರಯತ್ನಿಸಲಾಗುವುದು. ಕೇಂದ್ರ ಸರ್ಕಾರದ ಡಿಜಿಟಲ್ ಪ್ಲಾಟ್ ಫಾರಂ ಮತ್ತು ಪೋರ್ಟಲ್ನಲ್ಲಿ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಹಿರಿಯ ನಾಗರಿಕರಿಗೆ ಕಾನೂನಾತ್ಮಕವಾಗಿ ಇರುವ ರಕ್ಷಣೆ ಹಾಗೂ ಸರಕಾರದ ವಿವಿಧ ಯೋಜನೆ ಮತ್ತು ಸವಲತ್ತುಗಳ ಬಗ್ಗೆ ಅರಿವು ಮೂಡಿಸ ಬೇಕು. ಹಿರಿಯರು ಸಮಾಜದ ಸಂಪನ್ಮೂಲ ವ್ಯಕ್ತಿಗಳು ಎಂದರು.
ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ನಡೆದ ಸ್ಪರ್ದೆಗಳಲ್ಲಿ ವಿಜೇತ ರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಉಡುಪಿ ಜಿಲ್ಲಾಸ್ಪತ್ರೆ ವತಿ ಯಿಂದ ಹಿರಿಯ ನಾಗರಿಕರಿಗೆ ಕಣ್ಣಿನ ಪರೀಕ್ಷೆ, ಮಧುಮೇಹ, ರಕ್ತದೊತ್ತಡ, ಟಿಬಿ ಪರೀಕ್ಷಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ. ರಾಘವೇಂದ್ರ ಕಿಣಿ, ವಕೀಲ ಸಂಘದ ಅಧ್ಯಕ್ಷ ಬಿ.ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಆರ್, ವಿಕಲಚೇತನರ ಸಬಲೀಕರಣ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರತ್ನ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಿವೈಎಸ್ಪಿ ಸುಧಾಕರ್ ನಾಯಕ್ ಹಾಗೂ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.
ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಸಿ.ಎಸ್.ರಾವ್ ಸ್ವಾಗತಿಸಿ, ರೂಪಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.









