ಉಡುಪಿ ಓಡಿಎಫ್+1 ಜಿಲ್ಲೆಯಾಗಿ ಘೋಷಣೆ: ಡಾ.ನವೀನ್ ಭಟ್

ಉಡುಪಿ, ಅ.2: ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ಗಳು ಕಸ ಸಂಗ್ರಹಣೆ ಮತ್ತು ವಿಲೇವಾರಿ ಹಾಗೂ ಕಸ ಸಂಗ್ರಹಣೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಹೊಂದುವ ಮೂಲಕ ಉಡುಪಿ ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದೆ ಎಂದು ಜಿಲ್ಲಾ ಪಂಚಾ ಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ. ಹೇಳಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಶನಿವಾರ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯನ್ನು ಈಗಾಗಲೇ ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ಗಳು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿ ಯಾಗುವ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಸಿಇಓ ತಿಳಿಸಿದರು. ಎಸ್ಎಲ್ಆರ್ಎಂ ಘಟಕಗಳು ಕಸದಿಂದ ಆದಾಯ ವನ್ನು ಗಳಿಸುವ ಮೂಲಕ ತಮ್ಮ ವೆಚ್ಚಗಳನ್ನು ನಿಭಾಯಿಸಿಕೊಂಡು ಲಾಭದಾಯಕವಾಗಿ ನಡೆಸುವಂತೆ ಅವರು ಹೇಳಿದರು.
ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಿ. ತಮಗೆ ಈಗಾಗಲೇ ನೀರಿನ ಸಂಪರ್ಕ ಇದೆ, ಈ ಯೋಜನೆಯಡಿ ಸಂಪರ್ಕ ಬೇಡ ಎನ್ನುವ ಕುಟುಂಬಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ. ಲಿಖಿತ ವರದಿ ಪಡೆದು ಅನಿವಾರ್ಯವಾದಲ್ಲಿ ಮಾತ್ರ ರದ್ದುಗೊಳಿಸಿ. ಯೋಜನೆಯನ್ನು ಅನುಷ್ಠಾನಗೊಳಿಸುವಾಗ ಸಂಬಂದಪಟ್ಟ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಸಾರ್ವಜನಿಕರಿಗೆ ಜಲಜೀವನ್ ಮಿಷನ್ ಮಹತ್ವದ ಕುರಿತು ಸೂಕ್ತ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಎಂದವರು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಗ್ರಾಮ ಪಂಚಾಯತ್ಗಳು 15ನೇ ಹಣಕಾಸಿನ ಯೋಜನೆಯಡಿ ತಮ್ಮ ಕ್ರಿಯಾ ಯೋಜನೆಯಲ್ಲಿ ಕಡ್ಡಾಯವಾಗಿ ಜಲಜೀವನ್ ಯೋಜನೆ ಅನುಷ್ಠಾನ ಕ್ಕೆ ಅನುದಾನ ಮೀಸಲಿಡಬೇಕು. ಈ ಬಗ್ಗೆ ಗ್ರಾಮ ಪಂಚಾಯತ್ಗಳಿಗೆ ಮತ್ತೊಮ್ಮೆ ಸೂಚನೆ ನೀಡುವಂತೆ ಅವರು ಎಲ್ಲಾ ತಾಲೂಕು ಪಂಚಾಯತ್ಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ತಿಂಗಳಲ್ಲಿ ಒಂದು ದಿನ ಜಲಜೀವನ್ ಮಿಷನ್, ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ, ಇಂಗು ಗುಂಡಿಗಳಗಳ ಮಹತ್ವ, ಪ್ಲಾಸ್ಟಿಕ್ ವಿಲೇವಾರಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸ ಬೇಕು. ಇದಕ್ಕೆ ಸ್ಥಳೀಯ ನಿವೃತ್ತ ಶಿಕ್ಷಕರು, ಮಾಜಿ ಜನಪ್ರತಿನಿಧಿಗಳು, ನಿವೃತ್ತ ಇಂಜನಿಯರಿಂಗ್ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಅವರ ಮೂಲಕ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನರೇಗಾ ಯೋಜನೆಯಡಿ ಜಿಲ್ಲೆಯ ಶಾಲೆಗಳು, ಹಾಸ್ಟೆಲ್ಗಳು ಮತ್ತು ಆಸ್ಪತ್ರೆಗಳಲ್ಲಿ ಇಂಗುಗುಂಡಿಗಳ ನಿರ್ಮಾಣ ಮಾಡುವ ಕುರಿತಂತೆ ಸಂಬಂದಪಟ್ಟ ಇಲಾಖೆಗಳು ಅಗತ್ಯ ಮಾಹಿತಿ ನೀಡುವಂತೆ ಮತ್ತು ಗ್ರಾಮ ಪಂಚಾಯತ್ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಘಟಕ ಅಳವಡಿಸುವ ಕುರಿತಂತೆಯೂ ಮಾಹಿತಿ ನೀಡುವಂತೆ ತಿಳಿಸಿದರು.
ನೀರು ಮತ್ತು ನೈರ್ಮಲ್ಯ ಸಮಸ್ಯೆಗಳ ಕುರಿತು ಸಹಾಯವಾಣಿಗೆ ಬರುವ ಎಲ್ಲಾ ದೂರುಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆಯೂ ಸಿಇಓ ಸೂಚಿಸಿದರು. ಇದೇ ಸಂದರ್ಭದಲ್ಲಿ ಜಿಪಂನಿಂದ ಹೊರತಂದ ತ್ಯಾಜ್ಯ ಮುಕ್ತ ಗ್ರಾಮದತ್ತ ನಮ್ಮ ಚಿತ್ತ ಎಂಬ ಸ್ವಚ್ಚತೆ, ಜಲಜೀವನ್ ಮಿಷನ್ ಕುರಿತು ಅರಿವು ಮೂಡಿ ಸುವ ಮಾಹಿತಿ ಪತ್ರವನ್ನು ಡಾ.ನವೀನ್ ಭಟ್ ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಇಂಜಿನಿಯರ್ ಕೃಷ್ಣಾನಂದ, ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕ ಬಾಬು ಉಪಸ್ಥಿತರಿದ್ದರು.







