ಕೋವಿಡ್ ಮಾರ್ಗಸೂಚಿ ಪಾಲಿಸಿ ದಸರಾ ಆಚರಿಸಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ಮಂಗಳೂರು, ಅ.4: ದ.ಕ. ಜಿಲ್ಲಾದ್ಯಂತ ಅ.7ರಿಂದ 16ರವರೆಗೆ ನಾಡಹಬ್ಬ ದಸರಾವನ್ನು ಆಚರಿಸಲು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ದಸರಾವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲ ವರ್ಗದವರು ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಎರಡು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರವನ್ನು ಮೊಬೈಲ್ನಲ್ಲಿ ಹೊಂದಿದ್ದಲ್ಲಿ ಅಥವಾ ಪ್ರಮಾಣಪತ್ರದ ಪ್ರತಿಯನ್ನು ಹಾಜರುಪಡಿಸಿದ್ದಲ್ಲಿ ಮಾತ್ರ ಅನುಮತಿ ನೀಡಲಾಗುವುದು.
ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ ಅಂಥವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ದೇವಾಲಯದಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರಯಬೇಕು. ದೇವಾಲಯದಲ್ಲಿ ಜನರು ಗುಂಪುಗೂಡದಂತೆ ಸರದಿ ಸಾಲಿನಲ್ಲಿ ತೆರಳಬೇಕು. ಸುರಕ್ಷಿತ ಅಂತರವಿಲ್ಲದೆ ನಡೆಸಲಾಗುವ ಎಲ್ಲ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮದ ಆಯೋಜಕರು/ ದೇವಸ್ಥಾನದ ಆಡಳಿತಾಧಿಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯಬೇಕು.
ಆಯೋಜಕರು/ ದೇವಸ್ಥಾನದ ಆಡಳಿತಾಧಿಕಾರಿಗಳು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸುರಕ್ಷಿತ ಅಂತರ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜಕರೇ ಹೊಣೆಗಾರರನ್ನಾಗಿ ಮಾಡಲಾಗುವುದು. ಯಾವುದೇ ಮೆರವಣಿಗೆಗಳಿಗೆ ಅವಕಾಶ ಇರುವುದಿಲ್ಲ.
ಸಾಂಸ್ಕೃತಿಕ ಕಾರ್ಯಕ್ರಮಗಳು ಸಭಾಂಗಣದ ಸಾಮರ್ಥ್ಯಕ್ಕೆ ಒಳಪಟ್ಟು ಶೇ.50 ಜನರಿಗೆ ಮಿತಿಗೊಳಿಸಿ ನಡೆಸತಕ್ಕದ್ದು. ಆದಷ್ಟು ಮಟ್ಟಿಗೆ ಸಾರ್ವಜನಿಕರು ಮನೆಯಿಂದಲೇ ಕಾರ್ಯಕ್ರಮಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ನೇರ ಪ್ರಸಾರವನ್ನು ಆಯೋಜಕರು ವ್ಯವಸ್ಥೆ ಮಾಡಬೇಕು.
ದೇವಾಲಯ/ ಕಾರ್ಯಕ್ರಮ ಜರುಗುವ ಸ್ಥಳದಲ್ಲಿ ಎಲ್ಇಡಿ ಪರದೆಯ ಮೂಲಕ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ ಮಾಡಿಕೊಡುವುದು. ಮಾರ್ಗಸೂಚಿಗಳು ದುರ್ಗಾ ಪೂಜೆಗೂ ಅನ್ವಯವಾಗುತ್ತವೆ. ಕಾನೂನು ವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.







