ರಾಷ್ಟ್ರದ ಪ್ರಥಮ ಪ್ರಜೆಯ ವಾಸ್ತವ್ಯಕ್ಕೆ ಲೋಪವಾಗದಂತೆ ಎಚ್ಚರಿಕೆ ವಹಿಸಿ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ
ಅ.7-8ರಂದು ರಾಷ್ಟ್ರಪತಿ ಮಂಗಳೂರಿನಲ್ಲಿ ವಾಸ್ತವ್ಯ

ಮಂಗಳೂರು, ಅ.5: ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ ಶೃಂಗೇರಿಯ ಶ್ರೀ ಶಾರದಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅ.7ರಂದು ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಅ.8ರ ಸಂಜೆ ಮಂಗಳೂರಿನಿಂದ ಹೊಸದಿಲ್ಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ವಸತಿ, ಊಟೋಪಚಾರ ಹಾಗೂ ಬಂದೋಬಸ್ತ್ಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರಪತಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿರುವ ಹಿನ್ನೆಲೆಯಲ್ಲಿ ಅಂತಿಮ ಹಂತದಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಎಚ್ಚರಿಕಾ ಕ್ರಮಗಳ ಕುರಿತು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅ.7ರಂದು ಮಂಗಳೂರು ನಗರದಲ್ಲಿ ವಾಸ್ತವ್ಯ ಹಾಗೂ ಅ.8ರ ಸಂಜೆ ಮಂಗಳೂರು ವಿಮಾನನಿಲ್ದಾಣದಿಂದ ಹೊಸದಿಲ್ಲಿಗೆ ತೆರಳಲಿರುವ ರಾಷ್ಟ್ರಪತಿ, ಅವರೊಂದಿಗೆ ಆಗಮಿಸಲಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಉತ್ತಮ ವಾಸ್ತವ್ಯ, ಊಟೋಪಚಾರವನ್ನು ಒದಗಿಸುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ಒದಗಿಬಂದಿದೆ, ರಾಷ್ಟ್ರದ ಪ್ರಥಮ ಪ್ರಜೆಯ ವಾಸ್ತವ್ಯಕ್ಕೆ ಯಾವುದೊಂದು ಸಣ್ಣಪುಟ್ಟ ಲೋಪವಾಗದಂತೆಯೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಅತ್ಯುತ್ತಮವಾದ ರೀತಿಯಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಿಕೊಡಬೇಕು ಎಂದರು.
ಅದಕ್ಕಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ಅತಿಥಿ ಗೃಹ ಸಂಪೂರ್ಣ ಸಿಂಗಾರಗೊಳ್ಳಬೇಕು. ಅಂತಿಮ ಹಂತದ ಸಿದ್ಧತೆಗಳು ಪರಿಪೂರ್ಣವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕೊರತೆ ಎದುರಾಗಬಾರದು. ಸ್ಪಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಮಹಾನಗರ ಪಾಲಿಕೆಯಿಂದ ಅತಿಥಿಗೃಹದ ಆಸುಪಾಸಿನಲ್ಲಿಯೂ ಕೂಡ ಉತ್ತಮ ಸ್ಪಚ್ಛತೆ ಕಾಪಾಡಿಕೊಳ್ಳಬೇಕು. ಅದರಂತೆ ವಿಮಾನ ನಿಲ್ದಾಣದಿಂದ ಅತಿಥಿ ಗೃಹಕ್ಕೆ ಆಗಮಿಸುವ ರಸ್ತೆಗಳಲ್ಲಿ ಏನಾದರೂ ನ್ಯೂನತೆಗಳಿದ್ದಲ್ಲಿ ಕೂಡಲೇ ದುರಸ್ತಿ ಪಡಿಸಿಕೊಳ್ಳಬೇಕು. ಅಂತಿಮ ಹಂತದ ಸಿದ್ಧತೆಗಳು ಸಮಪರ್ಕವಾಗಿರಬೇಕು ಎಂದವರು ಹೇಳಿದರು.
ರಾಷ್ಟ್ರಪತಿ ವಾಸ್ತವ್ಯದ ವೇಳೆ ನಿಯೋಜಿಸಲಾಗಿರುವ ಸಿಬ್ಬಂದಿಗೆ ಕಡ್ಡಾಯವಾಗಿ ಆರ್ಟಿಪಿಸಿಆರ್ ತಪಾಸಣೆ ಆಗಬೇಕು. ಆದ್ಯತೆ ಮೇರೆಗೆ ಅವರ ವರದಿಗಳನ್ನು ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿ, ಮೆಸ್ಕಾಂನಿಂದ ವಿದ್ಯುತ್ ಕಡಿತವಾಗಬಾರದು. ಬಿಎಸ್ಸೆನ್ನೆಲ್ನಿಂದ ಹಾಟ್ಲೈನ್ ಎಳೆಯುವುದನ್ನು ಕೂಡಲೇ ಪೂರ್ಣಗೊಳಿಸಬೇಕು. ರಾಷ್ಟ್ರಪತಿ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಶಿಷ್ಟಾಚಾರದಂತೆಯೇ ವರ್ತಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಷ್ಟ್ರಪತಿ ಪ್ರವಾಸದಲ್ಲಿ ರಾಜ್ಯಪಾಲರು ಕೂಡ ಭಾಗವಹಿಸುತ್ತಿದ್ದಾರೆ. ಈ ದಿಸೆಯಲ್ಲಿ ಅವರ ವಾಸ್ತವ್ಯಕ್ಕೂ ಕಾಳಜಿ ನೀಡಬೇಕಿದೆ. ಸಂಬಂಧಿಸಿದ ಅಧಿಕಾರಿಗಳು ಜಾಗೃತರಾಗಿರಬೇಕು ಎಂದರು.
ಪೊಲೀಸ್ ಬಿಗಿ ಬಂದೋಬಸ್ತ್: ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ರಾಷ್ಟ್ರಪತಿ ಪ್ರವಾಸ ಕಾರ್ಯಕ್ರಮದಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗುತ್ತಿದೆ. ಈ ವೇಳೆ ಅಧಿಕಾರಿಗಳು ಸೇರಿದಂತೆ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುವುದು. ಆ ಸಮಯದಲ್ಲಿ ರಾಷ್ಟ್ರಪತಿ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಪೊಲೀಸರೊಂದಿಗೆ ಸಹಕರಿಸುವಂತೆ ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಯಶವಂತ್, ಸಹಾಯಕ ಕಮಾಂಡರ್ ಸಾಮ್ರಾಟ್, ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿ ಶ್ರೀಕಾಂತ್ ಟಾಟಾ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.







