ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಜೀವಗಳ ರಕ್ಷಿಸಿ: ಸಿಇಒ ಡಾ. ನವೀನ್ ಭಟ್

ಉಡುಪಿ, ಅ.7: ರಕ್ತ ನೀಡಿ ಜಗತ್ತನ್ನು ಗೆಲ್ಲಿಸಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯುತ್ತಿದ್ದು, ವರ್ಷದಲ್ಲಿ ಕನಿಷ್ಠ ಮೂರು ಬಾರಿ ರಕ್ತದಾನ ಮಾಡುವ ಮೂಲಕ ಪರೋಕ್ಷವಾಗಿ ಹಲವಾರು ಜೀವಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ ಹೇಳಿದ್ದಾರೆ.
ಗುರುವಾರ ಮಣಿಪಾಲ ಅನಂತನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, 6 ಕರ್ನಾಟಕ ನೌಕಾದಳ ಎನ್ಸಿಸಿ, ಕರ್ನಾಟಕ ರಾಜ್ಯ ನೌಕರರ ಸಂಘ, ಲಯನ್ಸ್ಕ್ಲಬ್ ಮಿಡ್ಟೌನ್ ಮತ್ತು ಯುವ ರೆಡ್ಕ್ರಾಸ್ ಘಟಕ ಹಾಗೂ ಉಡುಪಿ ಸರಕಾರಿ ಪಾಲಿಟೆಕ್ನಿಕ್ನ ಎನ್ನೆಸ್ಸೆಸ್ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ದೇಶದ ಪ್ರತಿ 100ರಲ್ಲಿ 5 ಜನರಿಗೆ ರಕ್ತದ ಕೊರತೆ ಕಂಡುಬರುತ್ತಿದ್ದು, ಹೆರಿಗೆ ಸಮಯದಲ್ಲಿ, ಅಪಘಾತ ಸಂಭಸಿದಾಗ ಹಾಗೂ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಹೆಚ್ಚಾಗಿ ರಕ್ತದ ಅವಶ್ಯಕತೆ ಇರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಯುವಜನತೆ ರಕ್ತದಾನ ಮಾಡುವ ಮೂಲಕ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಬೇಕು ಎಂದರು.
ನಿಯಮಿತವಾಗಿ ರಕ್ತದಾನ ಮಾಡವುದರಿಂದ ದೈಹಿಕ ಆರೋಗ್ಯ ಕ್ರಿಯಾಶೀಲ ವಾಗಿರುತ್ತದೆ. ಇದರಿಂದ ದೇಹದ ಸಮತೋಲನವನ್ನು ಕಾಪಾಡಬಹುದು. ರಕ್ತದಾನದಿಂದ ಯಾವುದೇ ತೊಂದರೆಗಳು ಸಂಭಸುವುದಿಲ್ಲ.ಆದ್ದರಿಂದ ಯುವಕರು ಸ್ವಯಂಪ್ರೇರಿತವಾಗಿ ಮುಂದೆ ಬಂದು ರಕ್ತದಾನ ಶಿಬಿರದಲ್ಲಿ ಭಾಗವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಿಇಓ ಡಾ.ನವೀನ್ ಭಟ್ ಅವರು ಸ್ವಯಂಪ್ರೇರಿತವಾಗಿ ತಾವೇ ರಕ್ತದಾನ ಮಾಡುವ ಮೂಲಕ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಮಾದರಿಯಾದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ ಮಾತನಾಡಿ, ಜಿಲ್ಲೆಯಲ್ಲಿ 2002ರಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಹಲವಾರು ಸಂಘ ಸಂಸ್ಥೆಗಳು ಈ ಕಾರ್ಯದಲ್ಲಿ ಕೈಜೋಡಿಸಿರುವುದು ಜಿಲ್ಲೆಯ ಸಾಮಾಜಿಕ ಪ್ರಜ್ಞೆ ಮತ್ತು ಮಾನವೀಯ ವೌಲ್ಯಗಳನ್ನು ಸೂಚಿಸುತ್ತದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಇಂಥ ಕಾರ್ಯಕ್ರಮದಲ್ಲಿ ಭಾಗವಹಿಸುವ ಇತರಿಗೆ ಪ್ರೇರಕರಾಗ ಬೇಕು ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ್ ಸಂಜು ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಣಿಪಾಲ ಸರಕಾರಿ ಪಾಲಿಟೆಕ್ನಿಕ್ನ ಪ್ರಾಂಶುಪಾಲೆ ಸಹನಾ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, 6ಕರ್ನಾಟಕ ನೌಕಾದಳ ಎನ್ಸಿಸಿಯ ಲೆ.ಕ. ರಿಕಿ ಪರೇರಾ, ಲಯನ್ಸ್ ಕ್ಲಬ್ನ ಅಧ್ಯಕ್ಷ ಆನಂದ್ ಗಾಣಿಗಾ, ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ಉಪಸ್ಥಿತರಿದ್ದರು.
ಸರಕಾರಿ ಪಾಲಿಟೆಕ್ನಿಕ್ನ ಶಿಕ್ಷಕಿ ವಂದನಾ ಆರ್.ಪಿ. ಸ್ವಾಗತಿಸಿ ಆಲಂದೂರು ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.









