ತೈಲೋತ್ಪನ್ನಗಳ ಮೇಲಿನ ಸುಂಕ ಇಳಿಕೆ; ಆರ್ಥಿಕ ಸ್ಥಿತಿಯನ್ನು ನೋಡಿಕೊಂಡು ನಿರ್ಧಾರ: ಸಿಎಂ ಬೊಮ್ಮಾಯಿ
ಬೆಂಗಳೂರು, ಅ. 10: `ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಇಳಿಕೆ ಸಂಬಂಧ ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ನೋಡಿಕೊಂಡು ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ತೈಲೋತ್ಪನ್ನಗಳ ಮೇಲಿನ ಸುಂಕ ಕಡಿಮೆ ಮಾಡುವ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ, ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಆದಾಯದ ಪ್ರಮಾಣವನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡಲಾಗುವುದು ಎಂದು ಇದೇ ವೇಳೆ ಸ್ಪಷ್ಟಣೆ ನೀಡಿದರು.
`ರಾಜ್ಯದಲ್ಲಿ ಕಲ್ಲಿದ್ದಲ ಕೊರತೆ ಸಂಬಂಧ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದು, ಕಲ್ಲಿದ್ದಲು ಪೂರೈಕೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ರಾಜ್ಯಕ್ಕೆ ಪ್ರತ್ಯೇಕವಾಗಿ ಕಲ್ಲಿದ್ದಲು ಗಣಿ ಹಂಚಿಕೆಯಾಗಿದೆ. ಒಡಿಶಾದ ಮಹಾನಂದಿ, ಚಂದ್ರಾಪುರ ಅರಣ್ಯದಲ್ಲಿ ಎರಡು ಕಲ್ಲಿದ್ದಲು ಗಣಿಯನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಲಾಗಿದೆ. ಇದರಿಂದ ಕಲ್ಲಿದ್ದಲು ತ್ವರಿತ ಪೂರೈಕೆಗೆ ಅನುಕೂಲವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಸಮಯಕ್ಕೆ ತಕ್ಕಂತೆ ಮಾತಾಡುತ್ತಾರೆ. ಅವರಿಗೆ ರಾಜಕೀಯ ಕಾಮಾಲೆ ಇದ್ದು, ಅವರು ಏನ್ ಮಾತಾಡುತ್ತಾರೆಂದು ಅವರಿಗೆ ಗೊತ್ತಾಗುವುದಿ. ಕಾಂಗ್ರೆಸ್ ಪಕ್ಷದ ಮುಖಂಡರ ಹೇಳಿಕೆಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿಗಳ ನೇಮಕ ಮಾಡುವ ಸಂಬಂಧ ಎಲ್ಲರ ಅಭಿಪ್ರಾಯ ಪಡೆದು ಸಮಸ್ಯೆ ಬಗೆಹರಿಸಲಾಗುವುದು ಎಂದರು.
`ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿರುವ 1ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ದಸರಾ ಉತ್ಸವದ ಬಳಿಕ ಶಿಕ್ಷಣ ತಜ್ಞರು ಹಾಗೂ ಕೋವಿಡ್ ಸಂಬಂಧಿಸಿದಂತೆ ತಜ್ಞರ ಉನ್ನತ ಮಟ್ಟದ ಸಮಿತಿ ಜೊತೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು'
-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ