‘ಕ್ಲೀನ್ ಇಂಡಿಯಾ ಆಂದೋಲನದಡಿ ಪರಿಸರ ಜಾಗೃತಿ ಮೂಡಿಸಿ’ -ಡಾ.ನವೀನ್ ಭಟ್
ಉಡುಪಿ, ಅ.26: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಅಭ್ಯಾಸವನ್ನು ನಾವೆಲ್ಲರು ಮರೆಯದೆ ಮೈಗೂಡಿಸಿಕೊ ಳ್ಳುವುದರ ಜೊತೆಗೆ ಪರಿಸರ ಜಾಗೃತಿಯ ಕುರಿತು ಇತರರಿಗೂ ಮಾದರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಹೇಳಿದ್ದಾರೆ.
ಕ್ಲೀನ್ ಇಂಡಿಯಾ ಕಾರ್ಯಕ್ರಮದ ಪ್ರಯುಕ್ತ ಕೊಡಿಬೆಟ್ಟು ಗ್ರಾಪಂ ವಠಾರ ದಲ್ಲಿ ನಡೆದ 9 ಕಿ.ಮೀ. ಸ್ವಚ್ಛತಾ ಜಾಥಾ ಕಾರ್ಯಕ್ರಮಕ್ಕೆ ಪ್ಲಾಸ್ಟಿಕ್ ಕಸ ಹೆಕ್ಕುವ ಮೂಲಕ ಅಧಿಕೃತ ಚಾಲನೆ ನೀಡಿ ಮಾತನಾಡುತಿದ್ದರು.
ಸ್ವಚ್ಛತೆಯನ್ನು ಕಾಪಾಡುವ ಸಲುವಾಗಿ ಪ್ರತಿಯೊಬ್ಬರೂ ಜವಾಬ್ದಾರಿ ಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಘನ, ದ್ರವ ತ್ಯಾಜ್ಯ ಗಳ ವಿಲೇವಾರಿಯಲ್ಲಿ ಸಾರ್ವಜನಿಕರ ಪಾತ್ರ ಕೂಡ ಬಹುಮುಖ್ಯವಾಗಿದೆ ಎಂದ ಅವರು, ತಮ್ಮ ತಮ್ಮ ಮನೆಯವರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮಕ್ಕಳು ನಾಂದಿ ಹಾಡಿದರೆ ಕ್ಲೀನ್ ಇಂಡಿಯಾ ಪರಿಕಲ್ಪನೆ ಸಾಕಾರ ಗೊಳ್ಳುವುದು ಎಂದರು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಮೊದಲ ಆದ್ಯತೆ ನೀಡಬೇಕು. ಇದಕ್ಕೆ ಸರಕಾರ ಹೊಣೆ ಎಂದು ಸುಮ್ಮನೆ ಕೂತರೆ ಪ್ರಯೋಜನವಿಲ್ಲ. ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕ್ಲೀನ್ ಇಂಡಿಯಾ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಕ್ರಿಯಾಶೀಲ ಪ್ರಯತ್ನಗಳನ್ನು ಮಾಡಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಪ್ರೆಡ್ ಡಿಸೋಜ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವೀಂದ್ರ ಬೋರ್ಕರ್, ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಕೊಡಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಸದಾನಂದ ಪ್ರಭು ಸ್ವಾಗತಿಸಿ, ಅಧ್ಯಕ್ಷೆ ಆಶಾ ಡಿ ಶೆಟ್ಟಿ ವಂದಿಸಿದರು. ಉದಯ ಕಾರ್ಯ ಕ್ರಮವನ್ನು ನಿರೂಪಿಸಿದರು.