ದೇವಸ್ಥಾನಗಳಲ್ಲಿ ಗೋಶಾಲೆ ಸ್ಥಾಪನೆಗೆ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ: ಮುಜರಾಯಿ ಇಲಾಖೆಯ 'ಎ' ಮತ್ತು 'ಬಿ' ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಮುಜರಾಯಿ ಇಲಾಖೆಯ ವತಿಯಿಂದ ನಗರದ ಶ್ರೀ ಕಪಿಲೇಶ್ವರ ಮಂದಿರದಲ್ಲಿ ಶುಕ್ರವಾರ (ನ.5) ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಹಾಗೂ ಇತರೆ ಗಣ್ಯರು ಗೋಪೂಜೆಯನ್ನು ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ , 250 ಕ್ಕೂ ಮೇಲ್ಪಟ್ಟ ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲಾವಾರು ಎ ಮತ್ತು ಬಿ ಗ್ರೇಡ್ ದೇವಸ್ಥಾನಗಳ ಪಟ್ಟಿ ಪಡೆದುಕೊಂಡು ಗೋಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಎಂದರು.
ಶಾಸಕ ಅಭಯ್ ಪಾಟೀಲ ಅವರು ಮಾತನಾಡಿ, ಸರಕಾರವು ಅಧಿಸೂಚಿತ ದೇವಸ್ಥಾನಗಳಲ್ಲಿ ಗೋಪೂಜೆ ಆರಂಭಿಸುವ ಮೂಲಕ ಗೋಮಾತೆಗೆ ಪ್ರಾಮುಖ್ಯತೆ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಬೆಳಗಾವಿ ಸಂಸದೆ ಮಂಗಲಾ ಅಂಗಡಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಾಜಿ ಶಾಸಕ ಸಂಜಯ ಪಾಟೀಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು





