ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ: ಸಿದ್ದರಾಮಯ್ಯ

ಬೆಂಗಳೂರು, ನ. 7: `ರಾಜ್ಯದ ಮಹತ್ವಾಕಾಂಕ್ಷೆಯ `ಮೇಕೆದಾಟು ಯೋಜನೆ' ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಗುವುದು' ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರವಿವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, `ತಮಿಳುನಾಡು ಸರಕಾರ ರಾಜಕೀಯ ಕಾರಣಕ್ಕೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ, ಯೋಜನೆ ಜಾರಿಗೆ ಬೇರೆ ಯಾವ ತಕರಾರು ಇಲ್ಲದ ಕಾರಣ ರಾಜ್ಯ ಸರಕಾರ ಕೂಡಲೇ ಯೋಜನೆ ಕೈಗೆತ್ತಿಕೊಳ್ಳಬೇಕು' ಎಂದು ಆಗ್ರಹಿಸಿದರು.
`ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡಿನವರು ಸುಮ್ಮನೆ ಕ್ಯಾತೆ ತೆಗೆಯುತ್ತಿದ್ದಾರೆ. ಆದರೆ, ಅವರಿಗೆ ಈ ಯೋಜನೆಯಿಂದ ಯಾವುದೇ ತೊಂದರೆಯಾಗಲ್ಲ, ಒಂದಷ್ಟು ಲಾಭವಾಗುತ್ತದೆ. ವಿದ್ಯುತ್ ಉತ್ಪಾದನೆ, ಬೆಂಗಳೂರಿಗೆ ಕುಡಿಯುವ ನೀರಿನ ಜೊತೆಗೆ ಮೇಕೆದಾಟು ಅಣೆಕಟ್ಟಿನಲ್ಲಿ ನೀರು ಶೇಖರಣೆ ಆಗುವುದರಿಂದ ತಮಿಳುನಾಡಿನಲ್ಲಿ ನೀರಿನ ಅಭಾವ ಇದ್ದಾಗ ಅವರಿಗೆ ಅದನ್ನು ಉಪಯೋಗಿಸಿಕೊಳ್ಳಲು ಅವಕಾಶವಾಗುತ್ತದೆ' ಎಂದು ಅವರು ತಿಳಿಸಿದರು.
`ಯೋಜನೆ ಅನುಷ್ಠಾನವಾದ ಮೇಲೆ ಕಾವೇರಿ ಪ್ರಾಧಿಕಾರವು ನ್ಯಾಯಾಲಯದ ಆದೇಶದ ಅನುಸಾರ ತಮಿಳುನಾಡಿನ ಪಾಲಿನ ನೀರನ್ನು ಅವರಿಗೆ ಬಿಡುತ್ತದೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ವಿನಃ ಬೇರೆ ಯಾವ ಕಾರಣಗಳು ಇಲ್ಲ. ಇದು ಕರ್ನಾಟಕದ ಗಡಿ ಒಳಗಡೆ ನಿರ್ಮಿಸಲು ಉದ್ದೇಶಿಸಿರುವ ಯೋಜನೆ, ತಮಿಳುನಾಡಿನವರಿಗೆ ಅವರ ಪಾಲಿನ ನೀರನ್ನು ಪಡೆಯಲು ಮಾತ್ರ ಹಕ್ಕಿದೆ. ನಾವು ಪ್ರವಾಹದ ನೀರನ್ನು ಶೇಖರಣೆ ಮಾಡಿಟ್ಟು, ಅದರ ಸದ್ಬಳಕೆ ಮಾಡಿಕೊಂಡರೆ ತಮಿಳುನಾಡಿಗೇನು ತೊಂದರೆ? ಸಮುದ್ರ ಪಾಲಾಗುತ್ತಿರುವ ಹೆಚ್ಚುವರಿ ನೀರನ್ನು ಸದುಪಯೋಗ ಮಾಡಿಕೊಳ್ಳಲು ರೂಪಿಸಿರುವ ಯೋಜನೆ ಇದು' ಎಂದು ಅವರು ತಿಳಿಸಿದರು.
`ಮೇಕೆದಾಟು ಯೋಜನೆ ಜಾರಿ ಮಾಡಲು ನಮ್ಮ ರಾಜ್ಯಕ್ಕೆ ಕಾನೂನಾತ್ಮಕ ಸೇರಿದಂತೆ ಎಲ್ಲ ರೀತಿಯ ಹಕ್ಕುಗಳಿವೆ. ಸುಪ್ರೀಂ ಕೋರ್ಟ್ ಅಥವಾ ಇತರೆ ಯಾವುದೇ ತಕರಾರುಗಳು ಇಲ್ಲ. ಹೀಗಾಗಿ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರಕಾರದ ಪರಿಸರ ಇಲಾಖೆಯು ಕೂಡಲೇ ಅನುಮತಿ ಪತ್ರ ನೀಡಬೇಕು ಹಾಗೂ ರಾಜ್ಯ ಸರಕಾರ ಕೂಡಲೇ ಯೋಜನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
`ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರು ನಗರದ ವರೆಗೆ ಪಾದಯಾತ್ರೆ ನಡೆಸುತ್ತೇವೆ. ಇನ್ನೆರೆಡು ದಿನದಲ್ಲಿ ನಿರ್ಧಿಷ್ಟ ದಿನಾಂಕವನ್ನು ಘೋಷಣೆ ಮಾಡುತ್ತೇವೆ. ಚುನಾವಣೆಗಾಗಿ ಅಥವಾ ಮತ ಗಳಿಕೆಗಾಗಿ ನಾವು ಪಾದಯಾತ್ರೆ ಮಾಡುತ್ತಿಲ್ಲ. ನಮ್ಮ ಸರಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ, ಯೋಜನಾ ವರದಿಯನ್ನು ಸಿದ್ಧಪಡಿಸಿತ್ತು. ಕೇಂದ್ರ ಸರಕಾರ ಅನುಮತಿ ನೀಡದ ಕಾರಣಕ್ಕೆ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ' ಎಂದು ಅವರು ಸ್ಪಷ್ಟಣೆ ನೀಡಿದರು.
`ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ಸಂಬಂಧಿಸಿದಂತೆ ಈ ಹಿಂದೆ ಪಾದಯಾತ್ರೆ ನಡೆಸಿ, ನಾವು ಅಧಿಕಾರಕ್ಕೆ ಬಂದರೆ ಸುಮಾರು 50 ಸಾವಿರ ಕೋಟಿ ರೂ.ಖರ್ಚು ಮಾಡುವುದಾಗಿ ಹೇಳಿದ್ದೆವು, ನಂತರ 2013ರಲ್ಲಿ ನಾವು ಅಧಿಕಾರಕ್ಕೆ ಬಂದಮೇಲೆ ವಾರ್ಷಿಕ 10 ಸಾವಿರ ಕೋಟಿ ರೂ.ನಂತೆ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ.ಗಳಿಗೂ ಅಧಿಕ ಹಣವನ್ನು ನೀರಾವರಿ ಉದ್ದೇಶಕ್ಕೆ ಖರ್ಚು ಮಾಡಿದ್ದೆವು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ, ನಮಗೆ ನಾಡಿನ ರೈತರ ಮತ್ತು ಜನರ ಹಿತ ಮುಖ್ಯ. ನಾವು ಕನ್ನಡಿಗರ ಪರ, ಕರ್ನಾಟಕದ ಪರ ಇದ್ದೇವೆ. ಮೇಕೆದಾಟು ಯೋಜನೆ ಶೀಘ್ರ ಜಾರಿಯಾಗಬೇಕು ಎಂಬುದು ನಮ್ಮ ಒತ್ತಾಯ ಎಂದು ಸಿದ್ದರಾಮಯ್ಯ ತಿಳಿಸಿದರು.







