ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಮತ್ತು ತುಷ್ಟೀಕರಣ ನೀತಿ ಹೆಚ್ಚಿತ್ತು: ನಳಿನ್ ಕುಮಾರ್ ಕಟೀಲ್
ಬಿಜೆಪಿ ಕರ್ನಾಟಕ ರಾಜ್ಯ ಪ್ರಕೋಷ್ಠಗಳ ಚಿಂತನಾ ವರ್ಗ ಉದ್ಘಾಟನೆ
![ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಮತ್ತು ತುಷ್ಟೀಕರಣ ನೀತಿ ಹೆಚ್ಚಿತ್ತು: ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಮತ್ತು ತುಷ್ಟೀಕರಣ ನೀತಿ ಹೆಚ್ಚಿತ್ತು: ನಳಿನ್ ಕುಮಾರ್ ಕಟೀಲ್](https://www.varthabharati.in/sites/default/files/images/articles/2021/11/12/313507-1636718669.jpg)
ಮಂಗಳೂರು: ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಹೊರತುಪಡಿಸಿ ನೆಹರೂ ಅವರಿಂದ ಮನಮೋಹ್ ಸಿಂಗ್ ವರೆಗಿನ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಮತ್ತು ತುಷ್ಟೀಕರಣ ನೀತಿ ಹೆಚ್ಚಿತ್ತು ಆದರೆ ಬಿಜೆಪಿಯ ಆಡಳಿತದಲ್ಲಿ ಯಾವುದೇ ಭಷ್ಟಾಚಾರ, ತುಷ್ಠೀಕರಣ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ಎರಡು ದಿನಗಳ ಬಿಜೆಪಿ ಕರ್ನಾಟಕ ರಾಜ್ಯ ಪ್ರಕೋಷ್ಠಗಳ ಚಿಂತನಾ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ನ ಸುದೀರ್ಘ ಕಾಲದ ಆಡಳಿತ ರಾವಣನದ್ದಾಗಿದ್ದು, ಮನೆ ಮನೆಗಳಲ್ಲಿ ರಾವಣರ ಸೃಷ್ಟಿಗೆ ಯತ್ನಿಸಿದೆ. ಆದರೆ ನಂತರದ ಬಿಜೆಪಿ ಆಡಳಿತ ರಾಮನದ್ದಾಗಿದೆ. ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯೊಂದಿಗೆ ಬಿಜೆಪಿ ಆಡಳಿತ ನಡೆಸುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮತ್ತು ಜನತಾ ಪಕ್ಷಗಳು ಹಲವು ಬಾರಿ ವಿಭಜನೆಗೊಂಡಿದ್ದರೂ ಬಿಜೆಪಿ ತನ್ನ ಸಿದ್ಧಾಂತ ಮತ್ತು ವಿಚಾರಧಾರೆಯ ಬಲದಿಂದ ವಿಭಜನೆಗೊಳ್ಳದೆ ಪ್ರಬಲವಾಗಿ ತಳವೂರಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ವ್ಯಕ್ತಿಗಿಂತ ಪಕ್ಷ ಮತ್ತು ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಧ್ಯೇಯದೊಂದಿಗೆ ಬಿಜೆಪಿ ಕಾರ್ಯಾಚರಿಸುತ್ತಿದೆ. ನಿಷ್ಠಾವಂತ ಕಾರ್ಯಕರ್ತರಲ್ಲಿ ವ್ಯಕ್ತಿತ್ವ ನಿರ್ಮಾಣಕ್ಕಾಗಿ ಚಿಂತನಾ ವರ್ಗ ನಡೆಸಲಾಗುತ್ತಿದೆ. ದೇಶದಲ್ಲಿ ವೊದಲ ಬಾರಿಗೆ ಬಿಜೆಪಿ ಕರ್ನಾಟಕ ಘಟಕದ ವತಿಯಿಂದ ಮಂಗಳೂರಿನಲ್ಲಿ ಪ್ರಕೋಷ್ಠಗಳ ಚಿಂತನಾ ವರ್ ನಡೆಸಲಾಗುತ್ತಿದೆ. ರಾಜ್ಯದಲ್ಲಿ ವೊದಲ ಬಾರಿಗೆ 24 ಪ್ರಕೋಷ್ಠ ರಚಿಸಿ, ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಬಿಜೆಪಿ ರಾಜ್ಯ ಘಟಕದ ಸಹಲ್, ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಮತ್ತು ಪೂರ್ಣ ಪ್ರಮಾಣದಲ್ಲಿ ಪ್ರಕೋಷ್ಠಗಳ ಸಂಘಟನೆಗೆ ಬಿಜೆಪಿ ಹೈಕಮಾಂಡ್ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ನಳಿನ್ ಹೇಳಿದರು.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ಉಪಸ್ಥಿತರಿದ್ದರು. ಕೈಗಾರಿಕಾ ಪ್ರಕೋಷ್ಠ ರಾಜ್ಯ ಸಂಚಾಲಕ ಪ್ರದೀಪ ಪೈ ಸ್ವಾಗತಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ ವಂದಿಸಿದರು. ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ ಡಾ. ಶಿವಯೋಗಿಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.