ಹಿಂಸಾಚಾರ: ಮಹಾರಾಷ್ಟ್ರದ ಅಮರಾವತಿಯಲ್ಲಿ ಕರ್ಫ್ಯೂ

ಸಾಂದರ್ಭಿಕ ಚಿತ್ರ
ಮುಂಬೈ: ಶುಕ್ರವಾರ ಹಾಗೂ ಶನಿವಾರದಂದು ಕಲ್ಲು ತೂರಾಟದ ಘಟನೆಗಳ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಶನಿವಾರ ಕರ್ಫ್ಯೂ ವಿಧಿಸಲಾಗಿದೆ ಎಂದು ಅಧಿಕೃತ ಆದೇಶ ತಿಳಿಸಿದೆ.
ಅಮರಾವತಿ ಪೊಲೀಸ್ ಕಮಿಷನರೇಟ್ ಶನಿವಾರ ಹೊರಡಿಸಿರುವ ಆದೇಶದ ಪ್ರಕಾರ, ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.
ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಸಿಆರ್ಪಿಸಿಯ ಸೆಕ್ಷನ್ 144 (1), (2), (3) ಅಡಿಯಲ್ಲಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಶನಿವಾರ ಬೆಳಗ್ಗೆ ಅಮರಾವತಿ ನಗರದ ವಿವಿಧೆಡೆ ಬಿಜೆಪಿ ಆಯೋಜಿಸಿದ್ದ ಬಂದ್ ವೇಳೆ ಗುಂಪೊಂದು ಕಲ್ಲು ತೂರಾಟ ನಡೆಸಿ ಅಂಗಡಿಗಳಿಗೆ ಹಾನಿ ಮಾಡಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತ್ರಿಪುರಾ ಕೋಮುಗಲಭೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ನಡೆಸಿದ ರ್ಯಾಲಿಯಲ್ಲಿ ಅಮರಾವತಿಯಲ್ಲಿ ಶುಕ್ರವಾರ ಕಲ್ಲು ತೂರಾಟದ ಘಟನೆಗಳು ನಡೆದಿದೆ ಎಂದು ಆರೋಪಿಸಿ ಬಂದ್ಗೆ ಕರೆ ನೀಡಲಾಗಿತ್ತು.
ಶುಕ್ರವಾರ ಎಂಟು ಸಾವಿರಕ್ಕೂ ಹೆಚ್ಚು ಜನರು ಅಮರಾವತಿ ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಜಮಾಯಿಸಿ ಅಲ್ಪಸಂಖ್ಯಾತ ಸಮುದಾಯದ ಮೇಲಿನ ದೌರ್ಜನ್ಯವನ್ನು ತಡೆಯಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಟ್ವಾಲಿ ಪೊಲೀಸರು ಗಲಭೆ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಇದುವರೆಗೆ 11 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಹತ್ತು ಜನರನ್ನು ಬಂಧಿಸಲಾಗಿದೆ.







