ಆಶಾ ಕಾರ್ಯಕರ್ತೆಯರಿಗೆ ನಗರ ಜೀವನ ಮಟ್ಟಕ್ಕೆ ಅನುಗುಣವಾಗಿ ವೇತನವನ್ನು ಹೆಚ್ಚಿಸಿ: ರಮಾ ಟಿ.ಸಿ.
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು, ನ.15: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ನಗರ ಜೀವನ ಮಟ್ಟಕ್ಕೆ ಅನುಗುಣವಾಗಿ ವೇತನವನ್ನು ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಬೆಂಗಳೂರು ಜಿಲ್ಲಾ ಉಪಾಧ್ಯಕ್ಷೆ ರಮಾ ಟಿ.ಸಿ. ಆಗ್ರಹಿಸಿದ್ದಾರೆ.
ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಸರಕಾರವು ಪ್ರತಿ ತಿಂಗಳು ವೇತನವನ್ನು ಸಕಾಲದಲ್ಲಿ ಬಿಡುಗಡೆ ಮಾಡಲಿಲ್ಲ. ಅಲ್ಲದೆ, ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಜೀವನಮಟ್ಟ ಸುಧಾರಣೆಗೆ ಸರಕಾರವು ಈಗ ನೀಡುತ್ತಿರುವ ಗೌರವಧನ ಸಾಕಾಗುತ್ತಿಲ್ಲ. ಆದುದರಿಂದ ಸರಕಾರವು ಇದನ್ನು ಪರಿಷ್ಕರಿಸಿ, ವೇತನವನ್ನು ಹೆಚ್ಚಿಸಬೇಕು ಎಂದು ಅವರು ಮನವಿ ಮಾಡಿದರು.
ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಉಚಿತ ಬಸ್ ಪಾಸ್ ನೀಡಬೇಕು. ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಸಬೆ ನಡೆಸಬೇಕು. ಕೋವಿಡ್ ನಿಯಂತ್ರಣ ಚಟುವಟಿಕೆಗಳಲ್ಲಿ ಡಾಟಾ ತುಂಬುವುದು, ಲಸಿಕಾ ಕೇಂದ್ರದಲ್ಲಿ ವಿವಿಧ ಕೆಲಸಗಳನ್ನು ಮಾಡಿಸುವುದು, ಸ್ವಾಬ್ ತೆಗೆಯುವುದು ಇನ್ನಿತರ ಕೆಲಸ ಮಾಡಿಸುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.
.jpg)







