ಮಧುಮೇಹಕ್ಕೆ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯ: ಡಾ.ಕಿಶೋರ್ ಕುಮಾರ್
ವಿಶ್ವ ಮಧುಮೇಹ ದಿನಾಚರಣೆ
ಮಂಗಳೂರು, ನ.18: ಸೂಕ್ತ ಸಮಯದಲ್ಲಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮಧುಮೇಹದ ಇರುವಿಕೆಯನ್ನು ಕಂಡುಕೊಳ್ಳಬಹುದಾಗಿದೆ ಹಾಗೂ ಚಿಕಿತ್ಸೆ, ಪೂರಕ ಆಹಾರ ಪದ್ದತಿಯನ್ನು ಅನುಸರಿಸುವ ಮೂಲಕವೂ ಗುಣಪಡಿಸಿಕೊಳ್ಳಬಹುದಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯು ಲಭ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.
ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಚಿಲಿಂಬಿಯ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ನಲ್ಲಿ ಗುರುವಾರ ನಡೆದ ವಿಶ್ವ ಮಧುಮೇಹ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮಧುಮೇಹವನ್ನು ತಡೆಗಟ್ಟಲು ವ್ಯಾಯಾಮ ಅತ್ಯುತ್ತಮ ಮಾರ್ಗವಾಗಿದೆ, ಪ್ರತಿನಿತ್ಯ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು. ಈ ರೋಗದ ಇರುವಿಕೆಯ ಬಗ್ಗೆ ತಿಳಿದ ನಂತರ ಗಾಬರಿ ಪಡುವ ಅಗತ್ಯವಿಲ್ಲ, ಉತ್ತಮ ಆಹಾರ ಪದ್ದತಿಯನ್ನು ರೂಢಿಸಿಕೊಂಡು ಈ ರೋಗವನ್ನು ದೂರ ಮಾಡಬಹುದಾಗಿದೆ ಎಂದು ಡಾ.ಕಿಶೋರ್ ಕುಮಾರ್ ಹೇಳಿದರು.
ಎ.ಜೆ. ಆಸ್ಪತ್ರೆಯ ತಜ್ಞ ವೈದ್ಯ ಡಾ. ಇ.ವಿ. ಸುರಂಜನ್ ಮಾಬಿನ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಜಗದೀಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ಸಬಾ ಶರಾಫ್, ವೈದ್ಯಾಧಿಕಾರಿ ಡಾ. ಜಯಶ್ರೀ, ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್, ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ ಅಧ್ಯಕ್ಷ ಕಿಶೋರ್ ಕೋಟ್ಯಾನ್, ಕಾರ್ಯದರ್ಶಿ ಶೋಭಾ ಅಶೋಕ್, ಮಹಿಳಾ ಸ್ವಸಹಾಯ ಸಂಘಗಳ ಸಂಯೋಜಕಿ ಅಜಿತ ವಸಂತ್ ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಪ್ರಾಸ್ತಾವಿಕ ಮಾತನಾಡಿದರು. ಎನ್ಟಿಸಿಪಿ ಸಂಯೋಜಕ ಹನುಮಂತಪ್ಪ ಸ್ವಾಗತಿಸಿದರು, ರಾಜೇಂದ್ರ ಚಿಲಿಂಬಿ ವಂದಿಸಿದರು, ಜಿಲ್ಲಾ ಆರೋಗ್ಯ ಶಿಕ್ಷಾಣಾಧಿಕಾರಿ ಜ್ಯೋತಿ. ಕೆ. ಕಾರ್ಯಕ್ರಮ ನಿರೂಪಿಸಿದರು.