ಉಡುಪಿ: ಜಿಲ್ಲೆಯಲ್ಲಿ ಡಿ.18ಕ್ಕೆ ಮೆಗಾ ಲೋಕ್ ಅದಾಲತ್
ಉಡುಪಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 18ರಂದು ಮೆಗಾ ಲೋಕ್ ಅದಾಲತ್ನ್ನು ಆಯೋಜಿಸಲಾಗುವುದು.
ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ಮೋಟಾರು ವಾಹನ ಅಪಘಾತ ಪರಿಹಾರ, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ವಿಚ್ಛೇದನ ಪ್ರಕರಣಗಳನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಅಕ್ರಮ ಮರಳು ಸಾಗಾಣಿಕೆ, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಾದಗಳಿಗೆ ಸಂಬಂಧಿಸಿದ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಹಾಗೂ ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣ, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣ, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸ ಲಾಗುವುದು ಹಾಗೂ ಸದರಿ ಆದೇಶದ ವಿರುದ್ಧ ಯಾವುದೇ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ.
ಕೋವಿಡ್ ಕಾರಣದಿಂದ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ ಕಕ್ಷಿಗಾರರು ಆನ್ಲೈನ್, ವೀಡಿಯೋ ಕಾನ್ಫರೆನ್ಸ್, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಖುದ್ದಾಗಿ ಹಾಜರಾಗುವ ಮೂಲಕ ಮೆಗಾ ಲೋಕ್ ಅದಾಲತ್ನಲ್ಲಿ ಭಾಗವಹಿಸಿ, ವಾದವನ್ನು ಬಗೆಹರಿಸಿಕೊಳ್ಳಬಹುದಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದೂರವಾಣಿ ಸಂಖ್ಯೆ: 0820-2523355 ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







