ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಹೈಕೋರ್ಟ್ ಅಸ್ತು
ಬೆಂಗಳೂರು, ನ.25: ಅತ್ಯಾಚಾರಕ್ಕೆ ಒಳಗಾಗಿ ಗರ್ಭ ಧರಿಸಿದ್ದ 16 ವರ್ಷದ ಸಂತ್ರಸ್ತೆಗೆ ಗರ್ಭಪಾತ ಮಾಡಿಸಿಕೊಳ್ಳಲು ಧಾರವಾಡ ಹೈಕೋರ್ಟ್ ಅನುಮತಿ ನೀಡಿದೆ.
ಸಂತಾನೋತ್ಪತ್ತಿ ಆಯ್ಕೆ ಚಲಾಯಿಸುವ ಹಕ್ಕು ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ತನ್ನ ದೈಹಿಕ ಸಮಗ್ರತೆಯನ್ನು ರಕ್ಷಿಸಿಕೊಳ್ಳುವ ಪವಿತ್ರ ಹಕ್ಕನ್ನು ಅವರು ಹೊಂದಿರುತ್ತಾರೆ ಎಂದು ಹೈಕೋರ್ಟ್ನ ನ್ಯಾಯಪೀಠ ಹೇಳಿದೆ.
ಅತ್ಯಾಚಾರಕ್ಕೆ ಒಳಗಾಗಿ ಗರ್ಭ ಧರಿಸಿದ್ದ ಹದಿನಾರು ವರ್ಷದ ಅಪ್ರಾಪ್ತೆಯು ಗರ್ಭಪಾತಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎನ್.ಎಸ್.ಸಂಜಯ್ಗೌಡ ನೇತೃತ್ವದ ಏಕಸದಸ್ಯ ಪೀಠ, ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ ನೀಡಿ ಆದೇಶಿಸಿದೆ.
ಸಂವಿಧಾನದ 21ನೆ ವಿಧಿಯ ಅಡಿಯಲ್ಲಿ ಉಲ್ಲೇಖಿಸಿರುವಂತೆ ಹದಿನಾರು ವರ್ಷ ವಯಸ್ಸಿನ ಅಪ್ರಾಪ್ತೆಯ ಭವಿಷ್ಯದ ಜೀವನದಲ್ಲಿ ಗರ್ಭಾವಸ್ಥೆಯನ್ನು ಮುಂದುವರೆಸುವ ಪರಿಣಾಮಗಳು ಘನತೆಯ ಜೀವನಕ್ಕೆ ತೀವ್ರ ಹಾನಿ ಉಂಟು ಮಾಡಬಹುದು ಎಂದು ಹೇಳಲಾಗಿದೆ.
ಅರ್ಜಿದಾರರ ಪರವಾಗಿ ವಕೀಲ ಶರದ್ ವಿ ಮಗದುಮ್ ಮತ್ತು ರಾಜ್ಯ ಸರ್ಕಾರದ ಪರವಾಗಿ ವಿ ಎಸ್ ಕಳಸೂರಮಠ ಅವರು ಪ್ರಕರಣದಲ್ಲಿ ವಾದಿಸಿದ್ದರು.