ಸಿಎಂ ಆಗಲಿದ್ದಾರೆ ಎಂದ ಈಶ್ವರಪ್ಪ ಅವರ ಅಭಿಮಾನಕ್ಕೆ ಚಿರಋಣಿ: ಸಚಿವ ಮುರುಗೇಶ್ ನಿರಾಣಿ
ಸ್ಪಷ್ಟೀಕರಣ ನೀಡಿ ಸಚಿವರು ಹೇಳಿದ್ದೇನು?

ಬಾಗಲಕೋಟೆ, ನ. 29: `ತಾನು ಮುಂದಿನ ಸಿಎಂ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ನೀಡಿದ್ದು, ಅವರು, ನನ್ನ ಮೇಲೆ ಪ್ರೀತಿ, ವಿಶ್ವಾಸವಿಟ್ಟು ಅವರು ಹೇಳಿರಬಹುದು. ಅವರ ಅಭಿಮಾನಕ್ಕೆ ನಾನು ಚಿರಋಣಿ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ನಿನ್ನೆ ನನ್ನ ತವರು ಕ್ಷೇತ್ರವಾದ ಬೀಳಗಿಯಲ್ಲಿ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಸಭೆಯನ್ನು ಆಯೋಜಿಸಲಾಗಿತ್ತು. ಆ ವೇಳೆ ಮಾತನಾಡುವಾಗ ಈಶ್ವರಪ್ಪನವರು ನಾನು ಮುಂದಿನ ಸಿಎಂ ಎಂದು ಹೇಳಿದ್ದರು. ಇದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ' ಎಂದು ಸ್ಪಷ್ಟನೆ ನೀಡಿದರು.
ಹಲವು ವರ್ಷಗಳಿಂದ ನಾವು ಮಾಡಿಕೊಂಡು ಬಂದಿರುವ ಸಾರ್ವಜನಿಕ ಸೇವೆ, ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಅವರು ಅಭಿಮಾನದಿಂದ ಹೇಳಿರಬಹುದು. 5 ದಶಕಗಳಿಂದ ರಾಜ್ಯದಲ್ಲಿ ಮಾಜಿ ಸಿಎಂ ಹಾಗೂ ನಮ್ಮ ನಾಯಕ ಯಡಿಯೂರಪ್ಪ, ಕೇಂದ್ರ ಮಾಜಿ ಸಚಿವ ಅನಂತಕುಮಾರ್ ಅವರ ಜೊತೆ ಈಶ್ವರಪ್ಪನವರು ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅವರೊಬ್ಬ ಹಿರಿಯ ನಾಯಕರು' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
`ನನಗೆ ಹಿಂದಿನ ಸಿಎಂ ಯಡಿಯೂರಪ್ಪ ಅವರು ಗಣಿ ಖಾತೆಯನ್ನು ನೀಡಿದ್ದರು. ಈಗ ಬಸವರಾಜ ಬೊಮ್ಮಾಯಿ ಅವರು ಕೈಗಾರಿಕೆ ಖಾತೆಯನ್ನು ನೀಡಿದ್ದಾರೆ. ಯಾವುದೇ ಖಾತೆ ನೀಡಿದರೂ ನಾನು ತೃಪ್ತಿಯಿಂದ ಕೆಲಸ ಮಾಡುತ್ತೇನೆ. ಈಗಲೂ ಅತ್ಯಂತ ಸಂತೋಷದಿಂದ ಇಲಾಖೆಯನ್ನು ನಿರ್ವಹಣೆ ಮಾಡುತ್ತಿದ್ದೇನೆ' ಎಂದು ಮುರುಗೇಶ್ ನಿರಾಣಿ ಸ್ಪಷ್ಟಣೆ ನೀಡಿದರು.
`ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವುದೇ ನಮ್ಮ ಮುಂದಿನ ಗುರಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವಕ್ಕೆ ನಾವೆಲ್ಲರೂ ಸಾಥ್ ನೀಡಿ 2023ರ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 120 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಮುಂದಿನ ಸವಾಲು' ಎಂದು ನಿರಾಣಿ ಇದೇ ವೇಳೆ ತಿಳಿಸಿದರು.
`2024ರ ಲೋಕಸಭೆ ಚುನಾವಣೆಯಲ್ಲಿ ಪುನಃ 25 ಸ್ಥಾನಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿದ್ದೇವೆ. ಮತ್ತೆ ಅದಕ್ಕಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲ್ಲು ಕಾರ್ಯತಂತ್ರವನ್ನು ರೂಪಿಸಿದ್ದೇವೆ. ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ನಿಂದ ಹಿಡಿದು ರಾಜ್ಯದಲ್ಲಿ ಪ್ರವಾಹ ಉಂಟಾದ ವೇಳೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ' ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
`ಒಂದು ಕಡೆ ಕೋವಿಡ್ ನಿರ್ವಹಣೆ ಮತ್ತೊಂದು ಕಡೆ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನತೆಯನ್ನು ರಕ್ಷಣೆ ಮಾಡಿ ಅವರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಜೊತೆಗೆ ಜೊತೆಗೆ ರಾಜ್ಯದ ಅಭಿವೃದ್ಧಿ ಕಡೆಯೂ ವಿಶೇಷ ನಿಗಾ ವಹಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಿಯೂ ಹಿನ್ನಡೆಯಾಗಿಲ್ಲ' ಎಂದು ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದರು.







