ಶಾಸಕ ವಿಶ್ವನಾಥ್ ಕೊಲೆಗೆ ಸಂಚು ಆರೋಪ: ಓರ್ವ ಸೆರೆ, ದಾಖಲೆ ಸಲ್ಲಿಕೆ
ಶಾಸಕ ಎಸ್.ಆರ್.ವಿಶ್ವನಾಥ್
ಬೆಂಗಳೂರು, ಡಿ.2: ಬಿಡಿಎ ಅಧ್ಯಕ್ಷ, ಶಾಸಕ ಎಸ್.ಆರ್.ವಿಶ್ವನಾಥ್ ಅವರ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜ್ ಯಾನೆ ಕುಳ್ಳ ದೇವರಾಜ್ ಎಂಬಾತನನ್ನು ರಾಜಾನುಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಡಿಯೊ ಸಂಬಂಧ ವಿಚಾರಣೆಗೊಳಪಡಿಸಿದ ಪೊಲೀಸರು, ಆನಂತರ ದೇವರಾಜ್ ಅನ್ನು ಬಂಧಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಕೋನವಂಶಿಕೃಷ್ಣ, ಪ್ರಕರಣದ ತನಿಖೆಗೆ ಒಂದು ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಿನಿಂದ ನಡೆಯುತ್ತಿದೆ ಎಂದು ವಿವರಿಸಿದರು.
ಇಂದು ವಿಶ್ವನಾಥ್ ಅವರು ರಾಜಾನುಕುಂಟೆ ಠಾಣೆಗೆ ಬಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋಗಳನ್ನು ನೀಡಿದ್ದಾರೆ. ಅವುಗಳನ್ನು ಹೆಚ್ಚಿನ ತನಿಖೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗುವುದು. ದೃಶ್ಯಗಳ ಸತ್ಯಾಸತ್ಯತೆ ಬಗ್ಗೆ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ನನ್ನನ್ನು ಹತ್ಯೆ ಮಾಡಲು ಸಂಚು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಬಂಧಿಸಿದ ಆಡಿಯೊ-ವಿಡಿಯೋ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇನೆ.
-ಎಸ್.ಆರ್.ವಿಶ್ವನಾಥ್, ಶಾಸಕ