ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ, ಡಿ.4: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ, ಯಾವುದೇ ಗೊಂದಲ ಹಾಗೂ ದೋಷ ಗಳಿಲ್ಲದ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ.
ಶನಿವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ತೊಡಗಿರುವ ಉಡುಪಿ ಮತ್ತು ಕಾಪು ತಾಲೂಕಿನ ಎಲ್ಲಾ ಮತಗಟ್ಟೆ ಅಧಿಕಾರಿ ಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ 2022 ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಎಲ್ಲಾ ಅರ್ಹ ಮತದಾರರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಕ್ಷೇತ್ರದಿಂದ ಹೊರ ಹೋದವರು ಮತ್ತು ಮರಣ ಹೊಂದಿದವರ ಹೆಸರುಗಳನ್ನು ಆ ಕ್ಷೇತ್ರದ ಮತಗಟ್ಟೆಯ ಮತದಾರರ ಪಟ್ಟಿಯಿಂದ ಕೈಬಿಡುವಂತೆ ತಿಳಿಸಿದರು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈ ಬಿಡುವ ಮುನ್ನ ಮತ್ತೊಮ್ಮೆ ಆ ಮನೆಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲನೆ ನಡೆಸಿ ದೃಢಡಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಮತದಾರರ ಪಟ್ಟಯಲ್ಲಿ ತಪ್ಪುಗಳಿದ್ದರೆ, ಚುನಾವಣೆಯ ಮತದಾನ ದಿನದಂದು ಗೊಂದಲ, ಗಲಾಟೆಗಳು ಸಂಭವಿ ಸಲಿದ್ದು, ಇದರಿಂದ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಅಡ್ಡಿಯಾಗುತ್ತದೆ ಎಂದರು.
ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರ ಪಾತ್ರ ಅತ್ಯಂತ ಪ್ರಾಮುಖ್ಯತೆ ಹೊಂದಿದ್ದು, ಅರ್ಹ ಎಲ್ಲಾ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಹಾಗೂ ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಬೇಕು. ನಿಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ 18 ವರ್ಷ ಪೂರ್ಣಗೊಂಡ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಶೇ.100 ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಲಸಿಕಾ ಮಿತ್ರ ಕಾರ್ಯಕ್ರಮದ ಮೂಲಕ ಮತದಾರರ ಪಟ್ಟಿಯನ್ನು ಉಪಯೋಗಿಸಿ ಕೊಂಡು, ಕೋವಿಡ್ ಲಸಿಕೆ ಪಡೆಯಲು ಅರ್ಹರಿರುವ 18 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಮೊದಲ ಡೋಸ್ ಪಡೆದ ನಾಗರಿಕರು, 2ನೇ ಡೋಸ್ ಪಡೆದ ಮತ್ತು ಪಡೆಯದ ನಾಗರಿಕರು, ಲಸಿಕೆ ಪಡೆಯದ ನಾಗರಿಕರನ್ನು ಈಗಾಗಲೇ ಗುರುತಿಸಲಾಗಿದೆ. ಎಲ್ಲಾ ಬಿಎಲ್ಓಗಳು ಮತದಾರರ ಪಟ್ಟಿ ಪರಿಶೀಲನೆ ಸಂದರ್ಭದಲ್ಲಿ, ತಮ್ಮ ಗ್ರಾಮಗಳಲ್ಲಿ ಲಸಿಕೆ ಪ್ರಗತಿ ಕುರಿತು ಮಾಹಿತಿಯನ್ನು ಪರಿಶೀಲಿಸಿ, ಎಲ್ಲರೂ ತಪ್ಪದೇ ಲಸಿಕೆ ಪಡೆಯುವಂತೆ ಮನವೊಲಿಸುವುದರ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕೆ ಪಡೆದು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಕಾರ್ಯ ನಿರ್ವಹಿಸಬೇಕು ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಸಂಬಂಧಪಟ್ಟ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಮತ್ತು ಬಿಎಲ್ಓಗಳು ಜಂಟಿಯಾಗಿ ತಪಾಸಣೆ ನಡೆಸಬೇಕು. ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಶೇ.100ರಷ್ಟು ಲಸಿಕಾಕರಣವಾಗುವಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸುವ ಸಿಬ್ಬಂದಿಯನ್ನು, ಮತದಾರರ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ಸೂಕ್ತ ರೀತಿಯಲ್ಲಿ ಅಭಿನಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಉಡುಪಿ ತಹಶೀ ಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ, ಜಿಲ್ಲಾ ಕೋವಿಡ್ ಲಸಿಕಾ ಅಧಿಕಾರಿ ಡಾ.ಎಂ.ಜಿ.ರಾಮ ಉಪಸ್ಥಿತರಿದ್ದರು.







