ವಿರೋಧಪಕ್ಷದವರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧ: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ, ಡಿ.13: ವಿರೋಧಪಕ್ಷದವರು ಪ್ರಸ್ತಾಪ ಮಾಡುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಹಲವಾರು ಕಾನೂನುಗಳನ್ನು ತರುವುದು, ಜನಪರವಾದ ಅಭಿವೃದ್ಧಿಯ ಕುರಿತು ಚರ್ಚೆ ಮಾಡಿ ಅದಕ್ಕೆ ಪರಿಹಾರ ದೊರಕಿಸುವುದು ಸರಕಾರದ ಆದ್ಯತೆ. ಸಮಗ್ರ ಕರ್ನಾಟಕದ ಜೊತೆಗೆ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಯ ವಿಚಾರ ಹಾಗೂ ಯೋಜನೆಗಳ ಬಗ್ಗೆ ಚರ್ಚೆ ಆಗಬೇಕೆನ್ನುವುದು ನಮ್ಮ ಉದ್ದೇಶ ಎಂದು ಅವರು ಹೇಳಿದರು.
ವಿರೋಧ ಪಕ್ಷದವರಿಗೆ ವಿಧಾನ ಮಂಡಲದ ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶವಿದೆ. ಅವರು ಯಾವುದೇ ವಿಚಾರಗಳನ್ನು ಎತ್ತಿದರೂ ಕೂಡ ವಾಸ್ತವದ ನೆಲೆಗಟ್ಟಿನ ಮೇಲೆ ಸರಕಾರ ಸಮರ್ಪಕವಾಗಿ ಉತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಹಲವಾರು ಅಭಿವೃದ್ಧಿ ಯೋಜನೆಗಳನ್ನು ತರಲು, ನಿರ್ಣಯಗಳನ್ನು ತೆಗೆದುಕೊಳ್ಳಬೇಕೆಂದಿದೆ. ಬಹಳ ವರ್ಷಗಳಿಂದ ಬೇಡಿಕೆಯಲ್ಲಿರುವ ವಿಷಯಗಳನ್ನು ಪೂರೈಸುವ ಬಗ್ಗೆ ಸಕಾರಾತ್ಮಕವಾಗಿ ಕೆಲಸ ಮಾಡಲಿದೆ ಎಂದು ಅವರು ತಿಳಿಸಿದರು.
ಮತಾಂತರ ನಿಷೇಧ ಕಾಯ್ದೆ: ಮತಾಂತರ ಕಾಯ್ದೆ ಕಾನೂನು ಇಲಾಖೆಯ ಪರಿಶೀಲನಾ ಸಮಿತಿಯಲ್ಲಿದ್ದು, ಒಪ್ಪಿಗೆಯಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಬೇಕು ನಂತರ ಸದನದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಮತಾಂತರ ಕಾಯ್ದೆಯನ್ನು ವಿರೋಧಿಸುವುದಾಗಿ ವಿರೋಧ ಪಕ್ಷಗಳ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಹಲವಾರು ಕಾನೂನುಗಳ ಬಗ್ಗೆ ಪರ-ವಿರೋಧ ಇದ್ದೇ ಇರುತ್ತದೆ. ಸರಕಾರ ಜನಹಿತಕ್ಕಾಗಿ ಕಾನೂನುಗಳನ್ನು ತರಲೇಬೇಕಾಗುತ್ತದೆ. ಈ ಕುರಿತು ಚರ್ಚೆ ಮಾಡುತ್ತೇವೆ ಎಂದರು.
ವಾರಣಾಸಿ ಭೇಟಿ: ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ವಾರಣಾಸಿಯಲ್ಲಿ ಬಿಜೆಪಿ ಮುಖ್ಯಮಂತ್ರಿಗಳ ಸಭೆಯಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಬೇಕೆಂಬ ಚಿಂತನೆ ಇದೆ. ಸಭೆಯಲ್ಲಿ ಪಾಲ್ಗೊಂಡು ನಾಳೆ ಸಂಜೆ ಹಿಂದಿರುಗುವುದಾಗಿ ಅವರು ತಿಳಿಸಿದರು.
ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ರೈತ ಸಂಘಟನೆಗಳೊಂದಿಗೆ ಈ ಕುರಿತು ಮಾತನಾಡುವುದಾಗಿ ತಿಳಿಸಿದರು.







