ಮದ್ಯ ಮಾರಾಟ ಗುರಿ ನಿಗದಿ ಧೋರಣೆ ಕೈಬಿಡಿ: ಸರಕಾರಕ್ಕೆ ಸ್ಪೀಕರ್ ಕಾಗೇರಿ ಸಲಹೆ

ಬೆಳಗಾವಿ, ಡಿ. 21: ರಾಜ್ಯದಲ್ಲಿ ಮದ್ಯ ಮಾರಾಟ ಮಾಡಲು ಗುರಿ ನಿಗದಿ ಮಾಡುವ ಧೋರಣೆಯನ್ನು ಸರಕಾರ ಕೈಬಿಡಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಇ.ತುಕಾರಾಂ ಕೇಳಿದ ಪ್ರಶ್ನೆಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಉತ್ತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್, ಇದು ಇಡೀ ರಾಜ್ಯದ ಸಮಸ್ಯೆಯಾಗಿದೆ. ಹಣಕಾಸು ಇಲಾಖೆಯ ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲಿ, ಸಿಎಂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರ್ಥಿಕ ಗುರಿ ನಿಗದಿಪಡಿಸದೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.
ಆರಂಭಕ್ಕೆ ಉತ್ತರ ನೀಡಿದ ಸಚಿವ ಕೆ.ಗೋಪಾಲಯ್ಯ, ಅಕ್ರಮ ಮದ್ಯ ಮಾರಾಟ ತಡೆಗೆ ಸರಕಾರ ಬದ್ಧವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಜಿಲ್ಲೆಗಳ ಅಬಕಾರಿ ಉಪ ಆಯುಕ್ತರ ಸಭೆಯನ್ನು ನಾಳೆ(ಡಿ.22) ಬೆಳಗಾವಿಯಲ್ಲಿ ಆಯೋಜಿಸಲಾಗಿದೆ. ಸಂಡೂರು ತಾಲೂಕಿನಲ್ಲಿ ಅಕ್ರಮ ಮದ್ಯ ತಡೆಗೆ ಮೂರು ವರ್ಷಗಳಲ್ಲಿ 231 ದಾಳಿಗಳನ್ನು ನಡೆಸಿ, ಅಕ್ರಮ ಮದ್ಯ ವಶಪಡಿಸಿಕೊಂಡು, 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ಮದ್ಯ ಮಾರಾಟದ ಮೂಲಕ ಪ್ರತಿ ತಿಂಗಳು ನಿಗದಿಪಡಿಸಿದ ತೆರಿಗೆ ಸಂಗ್ರಹದ ಗುರಿ ತಲುಪಲೇಬೇಕು ಎಂದು ಆರ್ಥಿಕ ಇಲಾಖೆಯು ಅಬಕಾರಿ ಇಲಾಖೆಯ ಮೇಲೆ ಒತ್ತಡ ಹಾಕುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮುಕ್ತವಾಗಿ ಮದ್ಯ ಮಾರಾಟವಾಗುತ್ತಿದೆ. ಬಡಕುಟುಂಬಗಳ ಮಹಿಳೆಯರು, ಮಕ್ಕಳು, ಕಾರ್ಮಿಕರು ಇದರ ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಆರ್ಥಿಕ ಇಲಾಖೆಯನ್ನು ಹೊಂದಿರುವ ಸಿಎಂ ಬೇರೆ ಯಾವುದಾದರೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕಡಿತಗೊಳಿಸಲಿ ಆದರೆ ಅಬಕಾರಿ ಮಾರಾಟಕ್ಕೆ ಗುರಿ ನಿಗದಿ ಮಾಡುವುದು ಬೇಡ ಎಂದು ಸದಸ್ಯ ತುಕಾರಾಂ ಆಗ್ರಹಿಸಿದರು.







