ತಿಂಗಳ ಅಂತ್ಯದೊಳಗೆ ವಿದ್ಯಾರ್ಥಿ ವೇತನ ಬಿಡುಗಡೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಳಗಾವಿ, ಡಿ. 22: ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ(ಎಸ್ಸಿ) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ತಿಂಗಳ ಅಂತ್ಯದೊಳಗೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಧವಾರ ವಿಧಾನಸಭೆ ಪ್ರಶ್ನೋತ್ತದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ರಿಝ್ವಾನ್ ಅರ್ಶದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಮೆಟ್ರಿಕ್ ನಂತರ 3.50ಲಕ್ಷ, ಮೆಟ್ರಿಕ್ ಪೂರ್ವದಲ್ಲಿ 10ಲಕ್ಷ ಒಟ್ಟು 13.50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಪೈಕಿ 10 ಲಕ್ಷ ವಿದ್ಯಾರ್ಥಿಗಳಿಗೆ ಎಂದರೆ ಶೇ.86ರಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡಗಡೆಯಾಗಿದೆ ಎಂದು ವಿವರ ನೀಡಿದರು.
ಕೆಲ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ವಿಳಂಬವಾಗಿದೆ. ಇದೀಗ ಆ ತೊಂದರೆ ನಿವಾರಿಸಲು ಇಲಾಖೆಯಿಂದ ಅಭಿಯಾನವನ್ನೆ ಹಮ್ಮಿಕೊಳ್ಳಲಾಗಿತ್ತು. ಕೆಲವರಿಗೆ ಆಧಾರ್ ಕಾರ್ಡ್ ಇರಲಿಲ್ಲ. ಕೆಲವರಿಗೆ ಬ್ಯಾಂಕ್ ಖಾತೆ ಜೋಡಣೆ ಆಗಿರಲಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಅಭಿಯಾನ ಮಾಡಿದ್ದೆವು. ಈ ತಿಂಗಳೊಳಗೆ ಎಲ್ಲರಿಗೂ ವಿದ್ಯಾರ್ಥಿ ವೇತನ ತಲುಪಲಿದೆ ಎಂದು ತಿಳಿಸಿದರು.
ಅಲ್ಲದೆ, 13 ಸಾವಿರ ವಿದ್ಯಾರ್ಥಿಗಳು ಆಡಳಿತ ಮಂಡಳಿ ಕೋಟಾದಲ್ಲಿ ವಿವಿಧ ಕೋರ್ಸ್ಗಳಿಗೆ ಸೇರ್ಪಡೆಯಾಗಿದ್ದಾರೆ. ಇವರಿಗೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಕಟ್ಟಕಡೆಯ ವಿದ್ಯಾರ್ಥಿಗೂ ಈ ತಿಂಗಳೊಳಗೆ ವಿದ್ಯಾರ್ಥಿ ವೇತನ ಸಿಗಲಿದೆ ಎಂದು ತಿಳಿಸಿದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಹಿರಿಯ ಸದಸ್ಯ ಡಾ.ಜಿ.ಪರಮೇಶ್ವರ್, ಇಲಾಖೆ ವಿದ್ಯಾರ್ಥಿ ವೇತನವನ್ನು ಸಕಾಲಕ್ಕೆ ನೀಡದಿದ್ದರೆ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಊಟ ಹಾಕುವುದಿಲ್ಲ. ಎರಡು ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಿಲ್ಲ. ಹೀಗಾದರೆ ಹೇಗೆ? ಕೂಡಲೇ ಎಲ್ಲರಿಗೂ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಧ್ವನಿಗೂಡಿಸಿದ ಬಿಎಸ್ಪಿ ಸದಸ್ಯ ಮಹೇಶ್, ಮೊದಲು ವಿದ್ಯಾರ್ಥಿ ವೇತನಕ್ಕೆ ಕಾಲೇಜುಗಳವರೇ ಮಾಹಿತಿಗಳನ್ನು ಅಪ್ಲೋಡ್ ಮಾಡುತ್ತಿದ್ದರು. ಈಗ ವಿದ್ಯಾರ್ಥಿಗಳೇ ಅಪ್ಲೋಡ್ ಮಾಡಬೇಕಿದೆ. ಇದನ್ನು ತಪ್ಪಿಸಿ. ಇದರಿಂದ ವಿಳಂಬವಾಗುತ್ತಿದೆ ಎಂದು ಹೇಳಿದರು.







