ಉದ್ಯೋಗ ಖಾತ್ರಿ ಕೂಲಿ ಬಾಕಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ
![ಉದ್ಯೋಗ ಖಾತ್ರಿ ಕೂಲಿ ಬಾಕಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ ಉದ್ಯೋಗ ಖಾತ್ರಿ ಕೂಲಿ ಬಾಕಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ](https://www.varthabharati.in/sites/default/files/images/articles/2021/12/23/318713-1640265552.jpg)
ಕುಂದಾಪುರ, ಡಿ.23: ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನರೇಗಾ ಕೂಲಿಕಾರರು ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕೃಷಿಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿ ಮಾಡಬೇಕು. ನರೇಗಾ ಕೂಲಿ ಕಾರ್ಮಿಕರಿಗೆ ಕೆಲಸದ ವೇತನ ಬಾಕಿ ಹಣವನ್ನು ಬಿಡುಗಡೆಗೊಳಿಸಬೇಕು. ಕೂಲಿಕಾರರಿಗೆ ದಿನ ಒಂದರ 600ರೂ. ವೇತನ ಹಾಗೂ ಎಷ್ಟು ದಿನ ಕೆಲಸ ಬಯಸಿ ಅರ್ಜಿ ಸಲ್ಲಿಸುತ್ತಾರೋ ಆಷ್ಟು ದಿನ ಅವರಿಗೆ ಕೆಲಸ ಒದಗಿಸಬೇಕು ಎಂದು ಒತ್ತಾಯಿಸಿರು.
ಕೃಷಿಕೂಲಿಕಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ, ಉದ್ಯೋಗ ಖಾತ್ರಿ ಕೆಲಸಗಾರರಿಗೆ ಬೇಸಿಗೆ ಯಲ್ಲಿ ಮಣ್ಣುಗಟ್ಟಿ ಯಾಗಿರುವುದರಿಂದ ಕೆಲಸದ ಪ್ರಮಾಣವನ್ನು ಅದಷ್ಟು ಕಡಿಮೆ ಮಾಡಬೇಕು. ಕೂಲಿಕಾರರ ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ತಲಪಲು ಪ್ರಯಾಣ ಭತ್ಯೆ ತಪ್ಪದೆ ಕೊಡಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಎಚ್.ನರಸಿಂಹ. ಮಾತನಾಡಿದರು. ತಾಪಂ ಕಾರ್ಯನಿರ್ವಾಹಕಾಧಿಕಾರಿ ಶ್ವೇತ ಎನ್. ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಾಮೂಹಿಕ ಮನವಿ ಸಲ್ಲಿಸಲಾಯಿತು. ಮುಖಂಡರಾದ ಬಸ್ರೂರು ಗ್ರಾಪಂ ಸದಸ್ಯೆ ಕಮಲ ಸೆಟ್ಟಿಗಾರ, ಶ್ಯಾಮಲ ಗುಜ್ಜಾಡಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಕಾರ್ಯದರ್ಶಿ ನಾಗರತ್ನ ನಾಡ ಕಾರ್ಯಕ್ರಮ ನಿರೂಪಿಸಿದರು.