ಉಡುಪಿ: ಕಾಂಗ್ರೆಸ್ ಮುಖಂಡ ಜನಾರ್ದನ ಭಂಡಾರ್ಕರ್ ನಿಧನ

ಉಡುಪಿ, ಡಿ.24: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಭಂಡಾರ್ಕರ್(60) ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಕರಂಬಳ್ಳಿ ವಿ.ಎಮ್. ನಗರದ ನಿವಾಸಿಯಾಗಿರುವ ಇವರು, ಇವರು ಎರಡು ಅವಧಿಗೆ ಉಡುಪಿ ನಗರಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಗಾಂಧಿವಾದಿಯಾಗಿದ್ದ ಇವರು ಹಲವು ಪ್ರಗತಿಪರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದರು. ಅಲ್ಲದೆ ಜನಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನಾ ಸಂತಾಪ ವ್ಯಕ್ತಪಡಿಸಿದ್ದಾರೆ.







