ಪುತ್ತೂರು; ರಸ್ತೆಯಲ್ಲಿ ವಾಹನ ಪಾರ್ಕಿಂಗ್: ಸಭಾಭವನ ಮಾಲಕರ ವಿರುದ್ಧ ಪ್ರಕರಣ ದಾಖಲು
![ಪುತ್ತೂರು; ರಸ್ತೆಯಲ್ಲಿ ವಾಹನ ಪಾರ್ಕಿಂಗ್: ಸಭಾಭವನ ಮಾಲಕರ ವಿರುದ್ಧ ಪ್ರಕರಣ ದಾಖಲು ಪುತ್ತೂರು; ರಸ್ತೆಯಲ್ಲಿ ವಾಹನ ಪಾರ್ಕಿಂಗ್: ಸಭಾಭವನ ಮಾಲಕರ ವಿರುದ್ಧ ಪ್ರಕರಣ ದಾಖಲು](https://www.varthabharati.in/sites/default/files/images/articles/2021/12/26/319094-1640529108.jpg)
ಸಾಂದರ್ಭಿಕ ಚಿತ್ರ
ಪುತ್ತೂರು: ಮಾಣಿ- ಮೈಸೂರು ಹೆದ್ದಾರಿಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ- ಪರ್ಪುಂಜದಲ್ಲಿರುವ ಎಬ್ರಾಡ್ ಮದಕಂ ಮತ್ತು ಶಿವಕೃಪಾ ಸಭಾ ಭವನದ ಮಾಲಕರ ವಿರುದ್ಧ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.
ಈ ಎರಡೂ ಸಭಾಭವನದಲ್ಲಿ ರವಿವಾರ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ವಾಹನಗಳನ್ನು ಮಾಣಿ- ಮೈಸೂರು ರಾ. ಹೆದ್ದಾರಿಯ ಇಕ್ಕೆಲಗಳಲ್ಲಿ ನಿಲ್ಲಿಸಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ರಸ್ತೆ ಬದಿಯಲ್ಲಿ ನಿಲ್ಲಿಸಿರುವ ವಾಹನಗಳ ಕಾರಣದಿಂದಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುತ್ತದೆ. ಇದರಿಂದಾಗಿ ಸಾರ್ವಜನಿಕರಿಗೆ ಅಪಾಯ ಉಂಟಾಗುವ ಸಾಧ್ಯತೆಯನ್ನು ಪರಿಗಣಿಸಿ ಮಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡೂ ಸಭಾಭವನದ ಮಾಲಕರು ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಪಾರ್ಕಿಂಗ್ ಗೆ ಸೂಕ್ತ ವ್ಯವಸ್ಥೆಯನ್ನು ಮಾಡದೆ, ವಾಹನ ನಿಲುಗಡೆಗೆ ಯಾವುದೇ ಸಿಬ್ಬಂದಿಯನ್ನೂ ನೇಮಿಸದೆ ನಿರ್ಲಕ್ಷ್ಯ ವಹಿಸಿದ್ದ ವಿರುದ್ಧ ಎರಡೂ ಸಭಾಭವನದ ಮಾಲಕರ ವಿರುದ್ಧ ಸಂಪ್ಯ ಠಾಣೆಯಲ್ಲಿ ಐಪಿಸಿ ಸೆಕ್ಷನ್ 283 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.