ಹಿಜಾಬ್ ಧರಿಸಿದ ಕಾರಣಕ್ಕೆ ತರಗತಿ ಪ್ರವೇಶ ನಿರಾಕರಣೆ: ಪ್ರಾಂಶುಪಾಲರ ಕ್ರಮಕ್ಕೆ ವ್ಯಾಪಕ ಖಂಡನೆ
ಉಡುಪಿ, ಡಿ.31: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ಕಾರಣಕ್ಕೆ ತರಗತಿಗೆ ಪ್ರವೇಶ ನಿರಾಕರಿಸಿದ ಕ್ರಮಕ್ಕೆ ವಿವಿಧ ಸಂಘಟನೆ ತೀವ್ರವಾಗಿ ಖಂಡಿಸಿದೆ.
ಸ್ಕಾರ್ಫ್ ಧರಿಸಿದ ಕಾರಣಕ್ಕಾಗಿ ತರಗತಿಗೆ ಪ್ರವೇಶ ನಿರಾಕರಣೆ ಮಾಡಿರುವ ಪ್ರಾಂಶುಪಾಲರ ಕ್ರಮವನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.
ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟವರು ಪ್ರಾಂಶುಪಾಲರ ಈ ತಾರತಮ್ಯ ನೀತಿಯನ್ನು ಗಂಭೀರವಾಗಿ ಪರಿಗಣಿಸಿ ಪ್ರಾಂಶುಪಾಲ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ಅನುವು ಮಾಡಿಕೊಡಬೇಕು. ಇಲ್ಲವೇ ತೀವ್ರ ಹೋರಾಟ ಮಾಡಲಾಗುವುದು ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಹಿಜಾಬ್ ಧರಿಸಿದ ಕಾರಣಕ್ಕೆ ಮುಸ್ಲಿಂ ವಿಧ್ಯಾರ್ಥಿಯನಿ ಯರಿಗೆ ತರಗತಿ ಪ್ರವೇಶ ನಿರಾಕರಿಸುತ್ತಿರುವುದು ಸಹಿಸ ತಕ್ಕದ್ದಲ್ಲ. ವಿದ್ಯಾರ್ಥಿ ಗಳನ್ನು ಒಳ್ಳೆಯ ಪ್ರಜೆಯಾಗಿ ರೂಪಿಸುವ ಶಿಕ್ಷಕ-ಶಿಕ್ಷಕಿಯರೇ ಇಂತಹ ವಿವಾದ ಗಳನ್ನು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದು ಖಂಡನೀಯ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಪ್ರವೇಶ ನಿರಾಕರಣೆಯಂತಹ ಘಟನೆ ನಾಳೆಯೂ ಮುಂದುವರಿದರೆ ಹೋರಾಟದ ಮೂಲಕ ತಕ್ಕ ಉತ್ತರ ನೀಡುವುದು ಅನಿವಾರ್ಯವಾಗಿರುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಅಹ್ಮದ್ ಎಚ್ಚರಿಕೆಯನ್ನು ನೀಡಿದ್ದಾರೆ.
ಹಿಜಾಬ್ ಧರಿಸಿದ ಕಾರಣಕ್ಕಾಗಿ ತರಗತಿ ಪ್ರವೇಶ ನಿರಾಕರಿಸಿದ ಮತ್ತು ಕಾಲೇಜು ಕ್ಯಾಂಪಸ್ ನಲ್ಲಿ ಭಾಷಾ ನಿರ್ಬಂಧ ವಿಧಿಸಿರುವ ಕುರಿತು ಕೂಡಲೇ ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧವಾಗಿ ಮೊಯಿದಿನಬ್ಬ, ಜಿಲ್ಲಾಧಿಕಾರಿ ಕೂರ್ಮ ರಾವ್ ಅವರಿಗೆ ಇಮೇಲ್ ಮೂಲಕ ಮನವಿಯೊಂದನ್ನು ಸಲ್ಲಿಸಿ, ಸರಕಾರಿ ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿಯ ಪ್ರಕರಣ ನಡೆದಿರುವುದು ತೀರಾ ಆಘಾತಕಾರಿ ವಿಷಯವಾಗಿದೆ. ಪ್ರಶಾಂತವಾದ ವಾತಾವರಣದಲ್ಲಿ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ ಸಂದರ್ಭ ದಲ್ಲಿ ಇಂತಹ ಕಾನೂನು ಬಾಹಿರ ಆದೇಶಗಳನ್ನು ನೀಡಿ ಗೊಂದಲದ ವಾತಾವರಣ ನಿರ್ಮಾಣ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಿಜಾಬ್ ಧರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿದೆ. ಭಾರತೀಯ ಸಂವಿಧಾನದ 25ನೇ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮೂಲಭೂತ ಹಕ್ಕುಗಳಾಗಿ ಸೇರಿಸಿದೆ. ಇದರ ಪ್ರಕಾರ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ, ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ. ಆದುದರಿಂದ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತುಗೊಳಿಸಬೇಕು. ಕಾಲೇಜಿನಲ್ಲಿ ನಡೆಯುತ್ತಿರುವ ಧಾರ್ಮಿಕ ತಾರತಮ್ಯವನ್ನು ಸರಿಪಡಿಸಬೇಕು ಮತ್ತು ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಬೇಕು ಎಂದು ಸಿಎಫ್ಐ ಪ್ರಕಟಣೆಯಲ್ಲಿ ಒತ್ತಾಯಿಸಿದೆ.