ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಜ.19ಕ್ಕೆ ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್

ಬೆಂಗಳೂರು, ಜ.9: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಜ.19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಹೇಳಿದ್ದಾರೆ.
ರವಿವಾರ ಮೇಕೆದಾಟು ಯೋಜನೆಗೆ ಅಡ್ಡಿ ಪಡಿಸುತ್ತಿರುವ ತಮಿಳುನಾಡು ವಿರುದ್ಧ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಸದಸ್ಯರು ಕರಾಳ ದಿನಾಚರಣೆ ಆಚರಿಸಿದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ತಮಿಳುನಾಡು ಸರಕಾರ ಮೇಕೆದಾಟು ಯೋಜನೆ ಬಗ್ಗೆ ವಿರೋಧ ಮಾಡುತ್ತಿರುವುದು ಅತ್ಯಂತ ಹೀನಾಯ ಹಾಗೂ ಬೇಜವಾಬ್ದಾರಿತನವಾಗಿದೆ. ಅಲ್ಲದೆ, ಕೇಂದ್ರ ಸರಕಾರ ಕೂಡಲೇ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.
ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ವಿರೋಧವಿಲ್ಲ. ಆದರೆ, 6 ವರ್ಷ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆಯನ್ನು ಏಕೆ ಜಾರಿ ಮಾಡಲಿಲ್ಲ. ಇಂದು ಸಂಗಮದಿಂದ ಪಾದಯಾತ್ರೆ ಆರಂಭ ಮಾಡಿದ್ದಾರೆ. ಆದರೆ, ನಾವು 2006ರಲ್ಲಿ ಮೇಕೆದಾಟು ಜಾಗಕ್ಕೆ ಹೋಗಿ ಶಂಕುಸ್ಥಾಪನೆ ಮಾಡಿ ಬಂದಿದ್ದೇವೆ ಎಂದು ವಾಟಾಳ್ ನುಡಿದರು.





