ಕೋವಿಡ್ ನಿಯಂತ್ರಣ ಕ್ಕೆ ಸ್ವಯಂಪ್ರೇರಣೆಯ ಜಾಗೃತಿ ಅಗತ್ಯ: ಸಚಿವ ಅಂಗಾರ
ಮಂಗಳೂರು, ಜ.10: ಕೋವಿಡ್ ನಿಯಂತ್ರ ಣಕ್ಕೆ ಸಾರ್ವಜನಿಕರ ಸ್ವಯಂಪ್ರೇರಿತ ಜಾಗೃತಿ ಮತ್ತು ಮುನ್ನೆಚ್ಚರಿಕೆಯ ಕ್ರಮಗಳು ಹೆಚ್ಚು ಪರಿಣಾಮಕಾರಿ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ದ.ಕ. ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ ಜಿಲ್ಲಾ ಘಟಕ ಮತ್ತು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಭಾಗಿತ್ವದಲ್ಲಿಂದು ಹಮ್ಮಿಕೊಂಡಿದ್ದ ಕೋವಿಡ್ ಜಾಗ್ರತಿ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಕಚೇರಿಯ ಗೇಟ್ ಆವರಣದಲ್ಲಿ ಅವರು ಚಾಲನೆ ನೀಡಿ ಮಾತನಾಡುತ್ತಿದ್ದರು.
ಲಾಕ್ ಡೌನ್, ಕರ್ಫ್ಯೂ ಹೇರಿಕೆಯಿಂದ ಜನಸಾಮಾನ್ಯರ ದಿನನಿತ್ಯದ ಬದುಕಿಗೆ ತೊಂದರೆಯಾಗುತ್ತದೆ. ಆದರೆ ಜನ ಸಾಮಾನ್ಯರ ಪ್ರಾಣ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಹಿನ್ನೆಲೆಯಲ್ಲಿ ಸರಕಾರ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದೆ.ಈ ನಿಟ್ಟಿನಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಸಾರ್ವಜನಿಕರ ಹೊಣೆಗಾರಿಕೆಯನ್ನು ಎಚ್ಚರಿಸಲು ಸಹಕಾರಿ ಎಂದು ಸಚಿವ ಅಂಗಾರ ಅಭಿಪ್ರಾಯಿಸಿದರು.
ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ರಾಜ್ಯದಲ್ಲಿ ಬೆಂಗಳೂರು ನಂತರ ಒಮೈಕ್ರಾನ್ ವೈರಸ್ ಹೆಚ್ಚು ವೇಗವಾಗಿ ಹರಡುತ್ತಿರುವ ದ.ಕ. ಜಿಲ್ಲೆಯಲ್ಲಿ ತಜ್ಞರ ಸೂಚನೆಯ ಪ್ರಕಾರ ಸರಕಾರ ಕೈಗೊಳ್ಳುತ್ತಿರುವ ಮುನ್ನೆಚ್ಚರಿಕೆಯ ಕ್ರಮಗಳನ್ನು ಕಾರ್ಯರೂಪಕ್ಕೆ ತರಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ದ.ಕ. ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಶಾಂತರಾಮ ಶೆಟ್ಟಿ, ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ, ಕಾರ್ಯದರ್ಶಿ ಬಿ.ಕೆ.ಕುಸುಮಾಧರ, ಮಾಜಿ ಕಾರ್ಯದರ್ಶಿ ಪ್ರಭಾಕರ ಶರ್ಮಾ, ಆಡಳಿತ ಸಮಿತಿಯ ಸದಸ್ಯ ರವೀಂದ್ರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ರವಿರಾಜ್ , ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಸದಸ್ಯರಾದ ಭಾಸ್ಕರ ರೈ ಕಟ್ಟಾ, ಪುಷ್ಪರಾಜ್ ಬಿ.ಎನ್., ಇಬ್ರಾಹೀಂ ಅಡ್ಕ ಸ್ಥಳ, ಆರಿಫ್ ಪಡುಬಿದ್ರೆ, ಜೀವನ್, ಸುಖ್ಪಾಲ್ ಪೊಳಲಿ, ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು.
ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣಮೀನು ಮಾರುಕಟ್ಟೆ, ಖಾಸಗಿ ಬಸ್ ನಿಲ್ದಾಣ, ಸ್ಟೇಟ್ ಬ್ಯಾಂಕ್, ಲೇಡಿಗೋಶನ್ ಆಸ್ಪತ್ರೆಯ ಆವರಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸದಸ್ಯರು, ಪತ್ರಕರ್ತರು ಮತ್ತು ಮಂಗಳಾ ಶಿಕ್ಷಣ ಸಮೂಹ ಸಂಸ್ಥೆಗಳ ಅರೆ ವೈದ್ಯಕೀಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.'