ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕಾರ ಸರಕಾರ ಹಿಂದುಳಿದವರ್ಗಕ್ಕೆ ಮಾಡುತ್ತಿರುವ ಅನ್ಯಾಯ ಸಾಬೀತು: ಸತ್ಯಜಿತ್
ಉಡುಪಿ, ಜ.17: ದೆಹಲಿಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರದರ್ಶನ ಮಾಡದಿದ್ದರೆ ಹಿಂದುತ್ವ ಮತ್ತು ನಾವೆಲ್ಲ ಹಿಂದು ನಾವೆಲ್ಲ ಒಂದು ಎಂಬ ಆಧಾರ ದಲ್ಲಿ ಅಸ್ತಿತ್ವಕ್ಕೆ ಬಂದ ಈ ಸರಕಾರ, ಹಿಂದುಳಿದವರ್ಗದವರಿಗೆ ಅನ್ಯಾಯ ಮತ್ತು ತುಳಿಯುತ್ತಿರುವುದು ಮತ್ತೊಮ್ಮೆ ಸಾಬೀತಾಗುತ್ತದೆ ಎಂದು ಶ್ರೀನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗುರುಗಳ ಸ್ತಬ್ದಚಿತ್ರ ತಿರಸ್ಕಾರಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗುವುದು. ಆದುದರಿಂದ ಹಿಂದು ಳಿದ ವರ್ಗದವರ ನೋವನ್ನು ಬಗೆಹರಿಸಿ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಮನ್ನಣೆ ಕೊಡಬೇಕು ಎಂದು ಒತ್ತಾಯಿಸಿದರು.
ಸ್ತ್ರೀ ಸಮಾನತೆ ಪ್ರತಿಪಾದಿಸಿ ಜಾತಿ, ಮತ ಭೇದಗಳನ್ನು ದಿಕ್ಕರಿಸಿ ಸಮಾ ಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ನಾರಾಯಣ ಗುರುಗಳ ಸ್ತಬ್ಧಚಿತ್ರ ವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳುವಳಿಕೆ ಇಲ್ಲದ ಅಜ್ಞಾನದ ಪರಮಾವಧಿ ಆಗಿದೆ. ಆಯ್ಕೆ ಸಮಿತಿಯಲ್ಲಿ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ. ಕೇಂದ್ರ ಸರಕಾರದ ಈ ನಿಲುವು ಹಿಂದುಳಿದ ಶೋಷಿತ ದಲಿತ ಗುರುಗಳಿಗೆ ಮತ್ತು ಸಮಾಜಕ್ಕೆ ಮಾಡಿದ ಅವಮಾನವಾಗಿದೆ ಎಂದು ಅವರು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷ ಅಚ್ಚುತ ಅಮೀನ್ ಕಲ್ಮಾಡಿ, ಜಿಲ್ಲಾ ಗೌರವಾಧ್ಯಕ್ಷ ರಾಜು ಪೂಜಾರಿ ಉಪ್ಪೂರು, ಜಿಲ್ಲಾಧ್ಯಕ್ಷ ಜಗನ್ನಾಥ್ ಕೋಟೆ, ಉಡುಪಿ ತಾಲೂಕು ಅಧ್ಯಕ್ಷ ಶಶಿಧರ್ ಎಂ.ಅಮೀನ್ ಉಪಸ್ಥಿತರಿದ್ದರು.
ನಾರಾಯಣಗುರು ನಿಗಮಕ್ಕಾಗಿ ಹೋರಾಟ
ಬಿಲ್ಲವ ಸಮುದಾಯವು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ್ದು, ಆ ಕಾರಣಕ್ಕಾಗಿ ನಾರಾಯಣಗುರು ನಿಗಮ ಸ್ಥಾಪನೆ ಅಗತ್ಯವಾಗಿದೆ. ಆದರೆ ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಈ ಸರಕಾರದಿಂದ ಹಿಂದುಳಿದವರ್ಗ ಗಳಿಗೆ ಮನ್ನಣೆ ಸಿಗುತ್ತಿಲ್ಲ. ಈ ಬಗ್ಗೆ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿ ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಮುಂದೆ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.