ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಕೇಂದ್ರದ ನಿಲುವು ಖಂಡಿಸಿ ಉಡುಪಿ ಡಿಸಿಗೆ ಮನವಿ

ಉಡುಪಿ, ಜ.20: ಗಣರಾಜ್ಯೋತ್ಸವ ಪರೇಡಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ ಅಗೌರವ ತೋರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ಜನರ ಮನಸ್ಸಿಗೆ ನೋವುಂಟು ಮಾಡಿ ರುವ ಕೇಂದ್ರ ಸರಕಾರವು ನಿಲುವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಬಿಲ್ಲವ ಸಂಘ/ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಉಡುಪಿ ಜಿಲ್ಲಾಧಿಕಾರಿ ಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.
ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಹಾಗೂ ಹಿರಿಯಡ್ಕ ಬಿಲ್ಲವ ಸಂಘದ ಅಧ್ಯಕ್ಷ ಮಲ್ಪೆ ರಾಘವೇಂದ್ರ ಮಾಸ್ಟರ್ ಮತ್ತು ಬೆಳ್ಮಣ್ ಬಿಲ್ಲವ ಸಂಘದ ಅಧ್ಯಕ್ಷ ಎಸ್.ಕೆ.ಸಾಲ್ಯಾನ್, ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಉಪಾಧ್ಯಕ್ಷ ಶ್ರೀಕರ ಅಂಚನ್, ಪ್ರಧಾನ ಕಾರ್ಯದರ್ಶಿ ಶಿವಾನಂದ ಹಾಗೂ ನಾರಾಯಣ ಗುರು ಯುವ ವೇದಿಕೆ ಹಾಗೂ ಯುವ ವಾಹಿನಿ ಘಟಕದ ಅಧ್ಯಕ್ಷರುಗಳು ಮತ್ತು 34 ಬಿಲ್ಲವ ಸಂಘಟನೆಗಳ ಅಧ್ಯಕ್ಷರು ಮತ್ತು ಪ್ರಮುಖರು ಉಪಸ್ಥಿತರಿದ್ದರು.