ಕುಂದಾಪುರ ಸರಕಾರಿ ಆಸ್ಪತ್ರೆಗೆ ಸ್ಪೀಚ್ ಆ್ಯಂಡ್ ಹಿಯರಿಂಗ್ ಕೇಂದ್ರ ಮಂಜೂರು
ಉಡುಪಿ, ಜ.22: ಕುಂದಾಪುರ ತಾಲೂಕು ಆಸ್ಪತ್ರೆಗೆ ಸ್ಪೀಚ್ ಆ್ಯಂಡ್ ಹಿಯರಿಂಗ್ ಕೇಂದ್ರ ಮಂಜೂರಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಜಿಲ್ಲೆಯ ಸಾರ್ವಜನಿಕರ ಮನವಿಯನ್ನು ಪುರಸ್ಕರಿಸಿ, ಕೇಂದ್ರ ಆರೋಗ್ಯ ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಆ್ಯಂಡ್ ಹಿಯರಿಂಗ್ಗೆ ಸಾರ್ವಜನಿಕರ ಹಿತಕ್ಕಾಗಿ ಔಟ್ ರೀಚ್ ಸೇವಾ ಕೇಂದ್ರವನ್ನು ಉಡುಪಿ ಜಿಲ್ಲೆಯಲ್ಲಿ ತೆರೆಯಬೇಕು ಎಂದು ಸಚಿವರು ಮನವಿ ಮಾಡಿದ್ದರು.
ಈ ಮನವಿಯನ್ನು ಪುರಸ್ಕರಿಸಿ, ಕುಂದಾಪುರ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಆ ಔಟ್ ರೀಚ್ ಕೇಂದ್ರವನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಆ್ಯಂಡ್ ಹಿಯರಿಂಗ್ ಸಂಸ್ಥೆಯು ಸುಮಾರು 1.17ಕೋಟಿ ರೂ. ಮೌಲ್ಯದ ಉಪಕರಣಗಳನ್ನು ಈ ಕೇಂದ್ರಕ್ಕಾಗಿ ಮಂಜೂರು ಮಾಡಿದೆ. ಅತೀ ಶೀಘ್ರದಲ್ಲಿ ಈ ಕೇಂದ್ರ ಉಡುಪಿಯ ಜನತೆಯ ಸೇವೆಗೆ ಕುಂದಾಪುರ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಲಭ್ಯವಾಗಲಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.