ಉಡುಪಿ: ಕೋವಿಡ್ ಲಸಿಕಾಕರಣ ಜಾಗೃತಿ ವಾಹನಕ್ಕೆ ಹಸಿರು ನಿಶಾನೆ

ಉಡುಪಿ, ಜ. 24: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು, ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಕೋವಿಡ್ ಸಾರ್ವತ್ರಿಕ ಲಸಿಕಾಕರಣ ಮತ್ತು ಕೋವಿಡ್ ಸೂಕ್ತ ನಡವಳಿಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹಸಿರು ನಿಶಾನೆ ತೆರುವ ಮೂಲಕ ಚಾಲನೆ ನೀಡಿದರು.
ಈ ಸಂಚಾರಿ ವಾಹನವು ಮುಂದಿನ 10 ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ಸಾರ್ವಜನಿಕರಲ್ಲಿ ಕೋವಿಡ್-19 ಕುರಿತಂತೆ ಜಾಗೃತಿ ಮೂಡಿಸಲಿದೆ. ಕೋವಿಡ್ ಸೂಕ್ತ ನಡವಳಿಕೆಯ ಅಗತ್ಯತೆ, ಸೋಂಕು ಬಾರದಂತೆ ತಡೆಯಲು ಲಸಿಕೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಕುರಿತು ಹಾಗೂ ಮಾಸ್ಕ್ ಧಾರಣೆ, ಸುರಕ್ಷತಾ ಅಂತರದ ಪಾಲನೆಯ ಮಹತ್ವ ಕುರಿತು ಅದು ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ಶ್ರೀರಾಮರಾವ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡಿಪುಡಿ, ಸತೀಶ್ ರಾವ್ ಎಚ್.ಎಸ್.ಪ್ರೀತಂ, ರವಿ ಮುಂತಾದವರು ಉಪಸ್ಥಿತರಿದ್ದರು.