ದ.ಕ.ಜಿಲ್ಲೆಯಲ್ಲಿ ಕೃಷಿ, ಉದ್ಯಮ, ಪ್ರವಾಸೋದ್ಯಮ, ಸಂಸ್ಕೃತಿ ಸ್ನೇಹಿ ಅಭಿವೃದ್ಧಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್
ಜಿಲ್ಲಾಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ

ಮಂಗಳೂರು : ಇಲ್ಲಿನ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ಜಿಲ್ಲೆಯಲ್ಲಿ 20 ವರ್ಷಗಳಿಂದ ಜೀವಂತ ಸಮಸ್ಯೆ ಆಗಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆ ಯನ್ನು ಪರಿಹರಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಜಿಲ್ಲೆಯಲ್ಲಿ ಗುರುತಿಸಲಾಗಿರುವ 66000 ಹೆಕ್ಟೇರ್ ಗೂ ಅಧಿಕ ಡೀಮ್ಡ್ ಫಾರೆಸ್ಟ್ ಭೂಮಿಯಲ್ಲಿ 34000 ಹೆಕ್ಟೇರ್ ಭೂಮಿ ಕೈಬಿಡಲು ಸರಕಾರ ನಿರ್ಧರಿಸಿದೆ ಎಂದು ಅವರು ತಮ್ಮ ಗಣರಾಜ್ಯೋತ್ಸವ ಸಂದೇಶದಲ್ಲಿ ತಿಳಿಸಿದರು. ರಾಮಕುಂಜದಲ್ಲಿ 98 ಎಕರೆ ಭೂಮಿಯಲ್ಲಿ ಸರಕಾರಿ ಗೋಶಾಲೆ ನಿರ್ಮಿಸಲು ಜಿಲ್ಲಾಡಳಿತ ಮುಂದಾಗುವ ಮೂಲಕ ಗೋಪ್ರೇಮಿ ಸರಕಾರ ಎಂಬುದನ್ನು ತೋರ್ಪಡಿಸಿದೆ ಎಂದವರು ಹೇಳಿದರು.
''ಸಾಮಾನ್ಯ ಶಿಕ್ಷಕನ ಮಗ ಇಂದು ಮಂಗಳೂರು ಉಸ್ತುವಾರಿ ಆಗಲು ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ. ಸಂವಿಧಾನವನ್ನು ಗಟ್ಟಿ ಗೊಳಿಸುವ ನಡವಳಿಕೆ, ಚಟುವಟಿಕೆ ಇಂದಿನ ಅನಿವಾರ್ಯ. ತುರ್ತು ಪರಿಸ್ಥಿತಿ, ಭಯೋತ್ಪಾದನೆ, ನಕ್ಸಲ್ ಚಟುವಟಿಕೆ ಮೂಲಕ ಸಂವಿಧಾನವನ್ನು ದುರ್ಬಲಗೊಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದರೂ ಅದನ್ನು ಯಶಸ್ವಿಯಾಗಿ ಹತ್ತಿಕ್ಕುವ ಮೂಲಕ ಸಂವಿಧಾನವೇ ಶ್ರೇಷ್ಠ ಅನ್ನುವುದನ್ನು ಸಾಬೀತು ಪಡಿಸಲಾಗುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.