ಕುಂದಾಪುರ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು: ಪೋಷಕರೊಂದಿಗೆ ಶಾಸಕ ಹಾಲಾಡಿ ಸಭೆ

ಕುಂದಾಪುರ, ಫೆ.2: ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಬುಧವಾರ ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಬಂದ ಹಿನ್ನೆಲೆಯಲ್ಲಿ ವಿವಾದ ಸೃಷ್ಠಿಯಾಗಿದೆ. ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬರುತ್ತಿರುವುದನ್ನು ವಿರೋಧಿಸಿ ಈ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿಗೆ ಭೇಟಿ ನೀಡಿ ಹಿಜಾಬ್ ಸಂಬಂಧ ಮುಸ್ಲಿಮ್ ವಿದ್ಯಾರ್ಥಿನಿಯರ ಪೋಷಕರ ಜೊತೆ ಮಾತುಕತೆ ನಡೆಸಿದರು.
ಹಿಜಾಬ್ ಧರಿಸುವುದು ನಮ್ಮ ಹಕ್ಕು. ನಮ್ಮ ಸಂಪ್ರದಾಯಕ್ಕೆ ಅಡ್ಡಿಯುಂಟು ಮಾಡುವುದು ಸರಿಯಲ್ಲ. ನಮ್ಮ ಮಕ್ಕಳು ಬುರ್ಖಾ ಹಾಕುತ್ತಿಲ್ಲ, ಸಂಪ್ರದಾಯದಂತೆ ಹಿಜಾಬ್ ಮಾತ್ರ ಧರಿಸುತ್ತಾರೆ. ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಮಧ್ಯೆ ಧರ್ಮ ತರುವುದು ಒಳ್ಳೆಯದಲ್ಲ ಎಂದು ಪೋಷಕರು ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಜಾಬ್ ಧರಿಸಿ ಕಾಲೇಜಿಗೆ ಬರುವುದು ಬೇಡವಾದರೆ ಪ್ರಾಂಶುಪಾಲರು ಲಿಖಿತವಾಗಿ ನೀಡಲಿ. ಕಾಲೇಜಿಗೆ ಮಕ್ಕಳನ್ನು ಕಳುಹಿಸಬೇಕೋ ಬೇಡವೋ ಎಂಬುದನ್ನು ನಾವು ತೀರ್ಮಾನ ಮಾಡುತ್ತೇವೆ ಎಂದು ಅವರು ಹೇಳಿದರು.
ಈ ವೇಳೆ ಪ್ರತಿಕ್ರಿಯಿಸಿದ ಶಾಸಕರು, ಹಿಜಾಬ್ ಧರಿಸಿ ಹಾಕಿಕೊಂಡು ಬರುವರು ಹಾಗೂ ಕೇಸರಿ ಶಾಲು ಧರಿಸಿ ಬಂದವರ ಮೇಲೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕೊನೆಗೆ ಯಾವುದೇ ನಿರ್ಣಯ ತೆಗೆದುಕೊಳ್ಳದೆ ಸಭೆಯನ್ನು ಅಂತ್ಯಗೊಳಿಸಲಾಯಿತು.