ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವ ಎಸ್.ಟಿ.ಸೋಮಶೇಖರ್

ಮಡಿಕೇರಿ ಫೆ.4 : ರಾಜ್ಯದ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಕಾರ ಸಂಘಗಳನ್ನು ಸ್ಥಾಪಿಸಿ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು, ಈ ಅವಕಾಶವನ್ನು ಗ್ರಾಮೀಣ ಸಹಕಾರಿಗಳು ಬಳಸಿಕೊಳ್ಳುವಂತಾಗಬೇಕು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಕರೆ ನೀಡಿದ್ದಾರೆ.
ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಸಚಿವರು ಮಾತನಾಡಿದರು.
ಸಹಕಾರ ಕ್ಷೇತ್ರದಲ್ಲಿ ರಾಜ್ಯವು ತನ್ನದೇ ಆದ ಸ್ಥಾನ ಹೊಂದಿದ್ದು, ಆ ದಿಸೆಯಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ. ಅದನ್ನು ಸಹಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಸಲಹೆ ಮಾಡಿದರು.
ರಾಜ್ಯದಲ್ಲಿ 5,400 ಸಹಕಾರ ಸಂಘಗಳಿದ್ದು, ಈ ಸಂಘಗಳಲ್ಲಿ ಒಂದೇ ತಂತ್ರಾಂಶ ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಾಗುವುದು ಎಂದರು.
ರಾಜ್ಯದಲ್ಲಿ ಸುಮಾರು 20 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ 14 ಸಾವಿರ ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದರು.
ಹಳೆಯ ಪದ್ಧತಿಯಲ್ಲಿ ಸಾಲ
ಹೊಸದಾಗಿ ಅನುಷ್ಠಾನಕ್ಕೆ ತಂದಿರುವ ಸಾಫ್ಟವೇರ್ ನಿಂದ ರೈತರಿಗೆ ಸಾಲ ವಿತರಣೆಗೆ ತೊಂದರೆಯಾತ್ತಿದೆ, ಸಿಬ್ಬಂದಿಗಳಿಗೆ ತರಬೇತಿಯಾಗಿಲ್ಲ. ರೈತರು ನೋಂದಣಿ ಕಚೇರಿಯಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾ.31 ರವರೆಗೆ ಹಳೆಯ ಪದ್ಧತಿಯಲ್ಲಿಯೇ ರೈತರಿಗೆ ಸಾಲ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಏ.1 ರಿಂದ ಹೊಸ ಸಾಫ್ಟವೇರ್ ಆ್ಯಪ್ ಮೂಲಕ ಕ್ರಮ ಕೈಗೊಳ್ಳಬೇಕು ಎಂದರು.
ಯಾವ ಜಿಲ್ಲೆಯಲ್ಲಿ ರೈತರಿಗೆ ಸಾಲಮನ್ನಾ ಬಾಕಿ ಉಳಿದಿದೆ ಆ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಶೀಘ್ರವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಸರ್ಕಾರ ಸಹಕಾರ ಸಂಘಗಳಿಗೆ ಹೊಸ ಕಟ್ಟಡ ನಿರ್ಮಿಸಿಕೊಡಲು ಘೋಷಣೆ ಮಾಡಿದೆ. ಆತ್ಮನಿರ್ಭರ ಯೋಜನೆಯಡಿ ಒಂದು ಸಾವಿರ ಸಹಕಾರ ಸಂಘಗಳಿಗೆ ರೂ.2 ಕೋಟಿಯಂತೆ ಅನುದಾನ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಈಗಾಗಲೇ 675 ಸಹಕಾರ ಸಂಘಗಳಿಗೆ 315 ಕೋಟಿ ಅನುದಾನ ಸಹಕಾರ ಇಲಾಖೆಗೆ ಬಂದಿದೆ ಎಂದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ ಸಹಕಾರ ಸಂಘಗಳಲ್ಲಿ ಸಹಕಾರಿಗಳಿಗೆ 5 ಲಕ್ಷ ರೂ.ವರೆಗೆ ಸಾಲ ಪಡೆಯಬಹುದಾಗಿದೆ. ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಉತ್ತಮವಾಗಿ ಕೆಲಸ ಮಾಡಿದ್ದಲ್ಲಿ ಸಹಕಾರ ಸಂಘವನ್ನು ಬೆಳೆಸಲು ಸಾಧ್ಯ. ಜೊತೆಗೆ ಸಾಲ ಪಡೆದವರು ಸಕಾಲದಲ್ಲಿ ಮರು ಪಾವತಿ ಮಾಡಿದ್ದಲ್ಲಿ, ಸಹಕಾರ ಸಂಘದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಸಹಕಾರ ಸಚಿವರು ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಬೆಳವಣಿಗೆಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ ದಿಸೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸಹ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಳಜಿವಹಿಸಿ ಸಾಲ ಸೌಲಭ್ಯ ಕಲ್ಪಿಸುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಸಚಿವ ಜೀವಿಜಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ಹೆಬ್ಬಾಲೆ ಸಹಕಾರ ಸಂಘದ ಅಧ್ಯಕ್ಷ ಪರಮೇಶ್, ಡಿಸಿಸಿ ಬ್ಯಾಂಕ್ನ ನಿರ್ದೇಶಕ ಚಿನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.







