ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ದಾರಿ ತಪ್ಪಿಸುತ್ತಿರುವ ಪ್ರಧಾನಿ: ಸಿದ್ದರಾಮಯ್ಯ
''ಸಂಘ ಪರಿವಾರದವರು ರಾಜ್ಯಕ್ಕೆ ಬೆಂಕಿ ಹಚ್ಚಿದ್ದಾರೆ''

ಬೆಂಗಳೂರು, ಫೆ.10: ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಜನಪರವಾಗಿ ಕೆಲಸ ಮಾಡಿಲ್ಲ, ನುಡಿದಂತೆ ನಡೆದಿಲ್ಲ. ಇದರ ಬದಲು ಭಾವನಾತ್ಮಕ ವಿಚಾರಗಳನ್ನು ಜನರ ಮುಂದೆ ಇಟ್ಟು ಜಾತಿ, ಧರ್ಮದ ನಶೆಯನ್ನು ತುಂಬಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಗಾರಿದರು.
ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಹಮ್ಮದ್ ಹಾರೀಸ್ ನಲಪಾಡ್ ಅಧಿಕಾರ ಸ್ವೀಕರಿಸಿದ ‘ಯುವ ಪ್ರತಿಜ್ಞಾ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಮಹಿಳೆಯರು, ದಲಿತರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರು ಇವರ ಆಡಳಿತದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.
ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾದ ಹೊಣೆ ಕಾಂಗ್ರೆಸ್ ಪಕ್ಷದ ಮೇಲಿದೆ. ದೇಶದ ಭವಿಷ್ಯ ರೂಪಿಸಬೇಕಾದ ಯುವ ಜನತೆ ತಮ್ಮ ಮೇಲಿರುವ ಈ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಅದೇ ರೀತಿಯಲ್ಲಿ ರಾಜ್ಯದಲ್ಲೂ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ, ಹೀಗಾಗಿ ಜನರ ಗಮನ ಬೇರೆಡೆಗೆ ಸೆಳೆಯಲು ಹಿಜಾಬ್ ಹಾಕುವುದನ್ನೇ ವಿವಾದವಾಗಿ ಮಾರ್ಪಾಡು ಮಾಡಿದ್ದಾರೆ. ಈ ಹಿಜಾಬ್ ಅನ್ನು ಮುಸ್ಲಿಮ್ ಹೆಣ್ಣು ಮಕ್ಕಳು ಬಹಳ ವರ್ಷಗಳಿಂದ ಹಾಕುತ್ತಾ ಬಂದಿದ್ದರು, ಆದರೂ ಅದರ ಬಗ್ಗೆ ತಕರಾರು ತೆಗೆದು ತಮ್ಮ ಮತ ಕ್ರೋಡೀಕರಣಕ್ಕಾಗಿ ದುಷ್ಟ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ನಾವು ಶಾಲೆ, ಕಾಲೇಜಿಗೆ ಹೋಗುವಾಗ ಕೇಸರಿ ಶಾಲು ಧರಿಸಿ ಬಂದಿದ್ದನ್ನು ನಾನೆಲ್ಲೂ ನೋಡಿರಲಿಲ್ಲ, ಆದರೆ ಈಗ ಸಂಘ ಪರಿವಾರದವರು ತಾವೇ ಖರೀದಿ ಮಾಡಿ ವಿದ್ಯಾರ್ಥಿಗಳಿಗೆ ಬಲವಂತವಾಗಿ ಕೇಸರು ಶಾಲು ಧರಿಸಿಕೊಂಡು ಹೋಗುವಂತೆ ಒತ್ತಡ ಹಾಕುತ್ತಿದ್ದಾರೆ. ಇಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.
ಹಿಜಾಬ್ ಇವತ್ತು ನಿನ್ನೆ ಧರಿಸಲು ಆರಂಭ ಮಾಡಿದ್ದಲ್ಲ, ಕುರ್ಆನ್ನಲ್ಲೂ ಈ ಬಗ್ಗೆ ಉಲ್ಲೇಖವಿದೆ. ಈ ಹಿಜಾಬ್ ಅನ್ನು ಹೆಣ್ಣು ಮಕ್ಕಳು ಧರಿಸಿದರೆ ಬೇರೆಯವರಿಗೆ ಏನು ತೊಂದರೆ? ಒಬ್ಬ ಸರಕಾರಿ ಕಾಲೇಜು ಪ್ರಿನ್ಸಿಪಾಲ್ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳನ್ನು ಒಳಗೆ ಬಿಡದೆ ಕಾಲೇಜು ಗೇಟ್ ಹಾಕ್ತಾರೆ ಎಂದರೆ ಇದಕ್ಕಿಂತ ಅಮಾನವೀಯವಾದುದ್ದು ಏನಿದೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದಲ್ಲಿ ನಂಬಿಕೆ ಇದ್ದರೆ ಸರಕಾರ ಕೂಡಲೇ ಇವರನ್ನು ಅಮಾನತು ಮಾಡಬೇಕಿತ್ತು. ಸಮವಸ್ತ್ರದ ಹೆಸರಲ್ಲಿ ವಿದ್ಯಾರ್ಥಿಗಳ ಮನಸಲ್ಲಿ ದ್ವೇಷ ತುಂಬಿ ಅವರ ಭವಿಷ್ಯ ಹಾಳುಮಾಡಲು ಹೊರಟಿದ್ದಾರೆ. ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುವ ಮೂಲಕ ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಅವರು ಹೇಳಿದರು.
ಕೆಂಪುಕೋಟೆ ಮೇಲೆ ಮುಂದೊಂದು ದಿನ ರಾಷ್ಟ್ರ ಧ್ವಜದ ಜಾಗದಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎನ್ನುವವರು ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್ಗಳು ಎಂದು ಸಚಿವ ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಯುವ ಜನರು ಹೋರಾಟಕ್ಕೆ ಸಿದ್ಧರಾಗಬೇಕು. ಮುಂದಿನ ವರ್ಷ ಚುನಾವಣೆ ಬರಲಿದೆ, ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು ಎನ್ನುವುದಕ್ಕಿಂತ ಬಿಜೆಪಿಯವರ ದುರಾಡಳಿತದಿಂದ ರಾಜ್ಯವನ್ನು ರಕ್ಷಿಸಬೇಕಾಗಿದೆ. ಇದರಲ್ಲಿ ಯುವ ಕಾಂಗ್ರೆಸ್ನ ಪಾತ್ರ ಬಹಳ ದೊಡ್ಡದಿದೆ. ಜನ ಬಿಜೆಪಿ ಅನ್ನು ಅಧಿಕಾರದಿಂದ ಕಿತ್ತೆಸೆಯಬೇಕು ಎಂದು ತೀರ್ಮಾನ ಮಾಡಿದ್ದಾರೆ ಎಂದು ಅವರು ಹೇಳಿದರು.
ಇಡೀ ರಾಜ್ಯಕ್ಕೆ ವಿಷ ಹಾಕಿದ್ದಾರೆ, ಬೆಂಕಿ ಹಚ್ಚಿದ್ದಾರೆ
ಬಿಜೆಪಿಯವರಿಗೆ ಯಾವ ಸಮಸ್ಯೆಗಳನ್ನು ಪರಿಹಾರ ಮಾಡುವುದು ಬೇಕಿಲ್ಲ. ಚುನಾವಣೆ ಬಂದಾಗ ಭಾವನಾತ್ಮಕ ವಿಷಯ ಮುಂದಿಟ್ಟು ಮತ ಕೇಳುತ್ತಾರೆ. ಚುನಾವಣೆಗೆ ವರ್ಷ ಇರುವಾಗಲೇ ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸಲ್ಲಿ ದ್ವೇಷ ತುಂಬಿ, ಸಮಾಜ ಒಡೆಯಲು ಹೊರಟಿದ್ದಾರೆ. ಸಂಘ ಪರಿವಾರದವರು ಬರಿ ಉಡುಪಿ, ಮಂಗಳೂರು ಮಾತ್ರ ಅಲ್ಲ ಇಡೀ ರಾಜ್ಯವನ್ನು ಹಾಳು ಮಾಡುತ್ತಾರೆ. ರಾಜ್ಯಕ್ಕೆ ವಿಷ ಹಾಕಿದ್ದಾರೆ, ಬೆಂಕಿ ಹಚ್ಚಿದ್ದಾರೆ.
ಸಿದ್ದರಾಮಯ್ಯ ವಿಪಕ್ಷ ನಾಯಕ







