ಉಡುಪಿ ನಗರಸಭೆ ಟೆಂಡರ್ ಅವ್ಯವಹಾರ ಆರೋಪ : ತನಿಖೆಗೆ ಆಗ್ರಹಿಸಿ ಡಿಸಿಗೆ ಮನವಿ
ಉಡುಪಿ, ಫೆ.11: ಈಗಾಗಲೇ ಸಂಪೂರ್ಣಗೊಂಡಿರುವ 15 ಲಕ್ಷ ರೂ.ಗೂ ಅಧಿಕ ಸಾರ್ವಜನಿಕ ಕಾಮಗಾರಿಗೆ ಉಡುಪಿ ನಗರಸಭೆಯು ಮತ್ತೊಮ್ಮೆ ಕರೆದಿರುವ ಟೆಂಡರ್ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದ್ದು, ಈ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಉಡುಪಿ ನಗರಸಭೆಯು ಟೆಂಡರ್ ಪ್ರಕಟಣೆ ಸಂಖ್ಯೆ: ಉನಸ ಬಿ.2 ಟೆಂ.ಪ್ರ:17:ಸಿಆರ್ 2021-22 ಜ.29ರಂತೆ 17 ಕಾಮಗಾರಿಗಳನ್ನು ನಿವರ್ ಹಿಸಲು ಟೆಂಡರ್ ಪ್ರಕಟಣೆ ನೀಡಿದೆ. ಆದರೆ ಈ ಕಾಮಗಾರಿಗಳ ಪೈಕಿ ಕುಂಜಿ ಬೆಟ್ಟು ಶಾರದ ನಗರ ರಸ್ತೆಯಿಂದ ಸೇತುವೆ ತನಕ 15 ಲಕ್ಷ ರೂ. ಮೊತ್ತದ ರಸ್ತೆ ಡಾಮರೀಕರಣ ಕಾಮಗಾರಿ ಯನ್ನು ಈಗಾಗಲೇ ನಿರ್ವಹಿಸಲಾಗಿದೆ. ಈ ಕಾಮಗಾರಿ ಮಾತ್ರವಲ್ಲದೇ ಇನ್ನೂ ಅನೇಕ ಕಾಮಗಾರಿ ಗಳನ್ನು ಸರಕಾರದ ಕಾನೂನು ನಿಯಮಗಳು ಸುತ್ತೋಲೆಗಳನ್ನು ಗಾಳಿಗೆ ತೂರಿ ಈಗಾಗಲೇ ಪೂರ್ಣಗೊಳಿಸಿದೆ.
ಈ ಕಾಮಗಾರಿಯಲ್ಲಿ ಇನ್ನೇನು ಕೆಲಸಗಳು ಬಾಕಿ ಇಲ್ಲದಿದ್ದರೂ ಈಗಾಗಲೇ ನಿರ್ವಹಿಸಿರುವ ಕಾಮಗಾರಿಗೆ ಟೆಂಡರ್ ಆಹ್ವಾನಿಸುವುದು ಕಾನೂನು ಬಾಹಿರ ವಾಗಿದ್ದು, ಅವ್ಯವಹಾರ ಹಾಗೂ ಅಕ್ರಮ ಅನಿಸುತ್ತದೆ. ಹಾಗೂ ಈ ಟೆಂಡರ್, ಪ್ರಕಟಣೆಗಳನ್ನು ನೀಡುವಲ್ಲಿನ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ಈ ರೀತಿ ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಪೌರಾಡಳಿತ ನಿರ್ದೇಶಕರು ಹಾಗೂ ಸರಕಾರದ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಗಳಲ್ಲಿ ಸ್ಪಷ್ಟಪಡಿಸಿದ್ದರೂ, ಅದನ್ನು ಕಡೆಗಣಿಸಿ, ನಗರಸಭೆಯ ಪೌರಾಯುಕ್ತರು ಹಾಗೂ ಅಧಿಕಾರಿಗಳು ನಗರಸಭೆಯ ಆಡಳಿತ ಪಕ್ಷದ ಸದಸ್ಯರೊಂದಿಗೆ ಶಾಮಿಲಾಗಿ ಈ ಬೃಹತ್ ಅವ್ಯವಹಾರವನ್ನು ನಡೆಸಿರುವುದು ಕಂಡು ಬರುತ್ತದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ನಗರಸಭೆಯ ಆಡಳಿತ ಪಕ್ಷದ ಸದಸ್ಯರು ತಮ್ಮ ಅಪ್ತ ಗುತ್ತಿಗೆದಾರರ ಮೂಲಕ ಕಾಮಗಾರಿಗಳನ್ನು ಈಗಾಗಲೇ ಅನಧಿಕೃತವಾಗಿ ನಿರ್ವಹಿಸಿದ್ದು, ಈ ಪ್ರಕರಣದಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಸಾರ್ವಜನಿಕ ರಿಂದ ಹಲವಾರು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಈ ಟೆಂಡರು ಪ್ರಕಟಣೆಗಳಲ್ಲಿ ನೀಡಿರುವ ಪ್ರತಿಯೊಂದು ಕಾಮಗಾರಿಯನ್ನು ಪರಿಶೀಲಿಸಿ ಈಗಾಗಲೇ ನಿರ್ವಹಿಸಿರುವ ಕಾಮಗಾರಿಗಳನ್ನು ಕೈಬಿಡುವುದು ತೀರಾ ಅವಶ್ಯಕವಾಗಿದೆ. ಆದ್ದರಿಂದ ಈ ಟೆಂಡರು ಪ್ರಕಟಣೆಗಳಿಗೆ ಸಂಬಂಧಿಸಿದ ಮುಂದಿನ ಟೆಂಡರು ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಮನವಿ ಮಾಡಿದೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಗರಸಭಾ ವಿಪಕ್ಷ ನಾಯಕ ರಮೇಶ್ ಕಾಂಚನ್, ದೂರುದಾರ ಯತೀಶ್ ಕರ್ಕೇರಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ನಗರಸಭೆ ಮಾಜಿ ಉಪಾಧ್ಯಕ್ಷ ಕುಶಾಲ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಶಾಂತ ಪೂಜಾರಿ, ಶಶಿರಾಜ್ ಕುಂದರ್, ಅಮೃತ್ ಶೆಣೈ, ಜ್ಯೋತಿ ಹೆಬ್ಬಾರ್, ಯುವ ಕಾಂಗ್ರೆಸ್ ಮುಖಂಡರಾದ ಡಿಯೋನ್ ಡಿಸೋಜ, ಹಮದ್ ಉಪಸ್ಥಿತರಿದ್ದರು.