‘ಪಿ.ಎಸ್.ಐ ನೇಮಕಾತಿಗೆ ತಡೆ’ - ಅಧ್ಯಯನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಆರಗ ಜ್ಞಾನೇಂದ್ರ

ಕಲಬುರಗಿ, ಫೆ.19: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಈ ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿ, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಇರಲಿದ್ದಾರೆ ಎಂದರು.
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಹಿಜಾಬ್ ಪ್ರಕರಣ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡಲಾಗುತ್ತಿದೆ. ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಯಾರು ಮಾಡಬಾರದು. ಕೋರ್ಟ್ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಈ ಪ್ರಕರಣದಲ್ಲಿ ಬೆರಳಣಿಕೆ ಕಡೆ ಅನಗತ್ಯ ಗೊಂದಲ ಮೂಡಿಸಲಾಗುತ್ತಿದೆ. ಕೆಲವು ದುಷ್ಟಶಕ್ತಿಗಳು, ಸಂಘಟನೆಗಳು ಈ ವಿಷಯದಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಸರಕಾರವು ಸೂಕ್ಷ್ಮವಾಗಿ ಗಮನಿಸಿದೆ. ಇಂತವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ, ಉಡುಪಿಯಲ್ಲಿ ಇದೇ ವಿಷಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಉಪಸ್ಥಿತರಿದ್ದರು.







