ಮಾ.6: ಮರಾಟಿ ಸಮಾಜ ಸೇವಾ ಸಂಘದಿಂದ ಪದ್ಮಶ್ರೀ ಮಹಾಲಿಂಗ ನಾಯ್ಕರಿಗೆ ಸನ್ಮಾನ
ಪುತ್ತೂರು, ಫೆ.23: ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಪದ್ಮಶ್ರಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಮಾ.6ರಂದು ಪುತ್ತೂರಿನ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಶಿವಪ್ಪ ನಾಯ್ಕ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸನ್ಮಾನ ಸಮಾರಂಭವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಪ್ಪ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನಗರಸಭಾ ಅಧ್ಯಕ್ಷ ಕೆ.ಜೀವಂಧರ್ ಜೈನ್, ಸುದ್ದಿ ಸಮೂಹ ಸಂಸ್ಥೆಯ ಸಂಪಾದಕ ಡಾ.ಯು.ಪಿ.ಶಿವಾನಂದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸನ್ಮಾನ ಸಮಾರಂಭಕ್ಕೆ ಮೊದಲು ಪುತ್ತೂರು ನಗರದ ದರ್ಬೆ ವೃತ್ತದಿಂದ ಕೊಂಬೆಟ್ಟು ಸಭಾಂಗಣದ ತನಕ ತೆರೆದ ಜೀಪ್ನಲ್ಲಿ ಮಹಾಲಿಂಗ ನಾಯ್ಕರನ್ನು ಮೆರವಣಿಗೆ ನಡೆಸಲಾಗುವುದು. ಸಮಾರಂಭದಲ್ಲಿ ಸಾರ್ವಜನಿಕರಿಗೆ ಹಾರಾರ್ಪಣೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮರಾಟಿ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಕರುಣಾಕರ ಪಾಂಗಳಾಯಿ, ಕೋಶಾಧಿಕಾರಿ ಬಾಲಕೃಷ್ಣ ನಾಯ್ಕ, ಸನ್ಮಾನ ಸಮಿತಿಯ ಸಂಚಾಲಕರಾದ ಮಂಜುನಾಥ್ ಎನ್.ಎಸ್., ಮಹಾಲಿಂಗ ನಾಯ್ಕ, ಸಂಘದ ಮಾಜಿ ಅಧ್ಯಕ್ಷ ಸುಂದರ ನಾಯ್ಕ, ಮಾಜಿ ಕಾರ್ಯದರ್ಶಿ ಅಶೋಕ್ ಬಲ್ನಾಡು ಉಪಸ್ಥಿತರಿದ್ದರು.