ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ

ಬೆಂಗಳೂರು, ಫೆ. 23: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ನಾಲ್ಕನೆ ಕಂತಿನ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 150 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, 225 ಮಂದಿ ಶಾಸಕರು ಹಾಗೂ 75 ಮಂದಿ ವಿಧಾನ ಪರಿಷತ್ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆ ಈ ಅನುದಾನವನ್ನು ಒದಗಿಸಲಾಗಿದೆ. ಈಗಾಗಲೇ ಮೊದಲ ಮೂರು ಕಂತಿನಲ್ಲಿ ತಲಾ 50 ಲಕ್ಷ ರೂ.ನಂತೆ ಒಟ್ಟು 450 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು.
ಇದೀಗ ಈಗ ನಾಲ್ಕನೆ ಕಂತಿನ ಅನುದಾನವನ್ನು ಬಿಡುಗಡೆ ಮಾಡಿದ್ದು, ಪ್ರತಿ ತಿಂಗಳು ಆರ್ಥಿಕ ಮತ್ತು ಭೌತಿಕ ಪ್ರಗತಿಯ ವಿವರನ್ನು ಸರಕಾರಕ್ಕೆ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ. ನಿಯಮಾನುಸಾರ ಹಣ ಬಳಕೆ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿಗಳ ಅಥವಾ ಉಪವಿಭಾಗಾಧಿಕಾರಿಗಳ ಮೇಲು ಸಹಿಯೊಂದಿಗೆ ಸರಕಾರಕ್ಕೆ ಸಲ್ಲಿಸಬೇಕು.
ಬಿಡುಗಡೆ ಮಾಡಿದ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆ. ಅಲ್ಲದೆ, ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಕಾಯ್ದೆಯನ್ವಯ ಎಸ್ಸಿ-ಎಸ್ಟಿ ವರ್ಗದವರಿಗೆ ಉಪಯೋಗವಾಗುವ ಕಾರ್ಯಕ್ರಮಗಳಿಗೆ ಮಾತ್ರ ವೆಚ್ಚ ಮಾಡಬೇಕು. ಡಿಸೆಂಬರ್ನಲ್ಲಿ ನಿವೃತ್ತರಾದ ಪರಿಷತ್ ಸದಸ್ಯರಿಗೂ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಹೊಸದಾಗಿ ಆಯ್ಕೆಯಾದ 25 ಮಂದಿ ವಿಧಾನ ಪರಿಷತ್ ಸದಸ್ಯರಿಗೆ ಮುಂದಿನ ಆರ್ಥಿಕ ವರ್ಷದಿಂದ ಅನುದಾನ ನೀಡುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.







