ಮಂಗಳೂರು: ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಫೆ.23: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್- ಬಜರಂಗ ದಳದ ವತಿಯಿಂದ ಬುಧವಾರ ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು.
ವಿಶ್ವಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ.ಪುರಾಣಿಕ್ ಮಾತನಾಡಿ ಹಿಂದೂ ಧರ್ಮಕ್ಕಾಗಿ, ಸಮಾಜಕ್ಕಾಗಿ, ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ರೀತಿ ಹತ್ಯೆ ಮಾಡಿದವರ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಸರಕಾರ ಓಟ್ಬ್ಯಾಂಕ್ಗಾಗಿ ಹಿಂಪಡೆದಿತ್ತು. ಈಗಲೂ ಸಮಾಜವಿರೋಧಿ ಶಕ್ತಿಗಳು ವಿಜೃಂಭಿಸುತ್ತಿದ್ದರೂ ಕೂಡ ಬಿಜೆಪಿ ಸರಕಾರ ಸೂಕ್ತ ಕಾರ್ಯಾಚರಣೆ ಮಾಡುವಲ್ಲಿ ವಿಫಲವಾಗಿದೆ. ಸಮಾಜ ವಿರೋಧಿ ಶಕ್ತಿಗಳನ್ನು ದಮನಿಸುವ ಜವಾಬ್ದಾರಿ ಸರಕಾರಕ್ಕಿದೆ. ಈ ಬಗ್ಗೆ ಸರಕಾರ ದೃಢ ನಿಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ವಿಹಿಂಪ ವಿಭಾಗ ಸಹ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಹಿಂದುತ್ವಕ್ಕಾಗಿ ಕೆಲಸ ಮಾಡಿದ ಹತ್ತಾರು ಮಂದಿ ಹತ್ಯೆಗೀಡಾಗಿದ್ದಾರೆ. ಆದರೆ ಅವರನ್ನು ಹತ್ಯೆಗೈದವರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಡ್ರಗ್ಸ್, ಗೋಹತ್ಯೆಯ ಮೂಲಕ ಹಣ ಸಂಗ್ರಹಿಸಿ ಅದನ್ನು ಹಿಂದೂಗಳ ಹತ್ಯೆ ಮಾಡಿದವರಿಗೆ ನೀಡಲಾಗುತ್ತಿದೆ ಎಂದು ಆಪಾದಿಸಿದರು.
ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಮಾತನಾಡಿ, ಸಹಿಸುವಷ್ಟು ಸಹಿಸಿದ್ದೇವೆ. ಇನ್ನು ಸಹಿಸಲು ಸಾಧ್ಯವಿಲ್ಲ. ಹರ್ಷ ಅವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಸರಕಾರ ಹೇಳಿಕೆಗಳನ್ನು ನೀಡುವ ಬದಲು ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿದರು.
ಬಜರಂಗದಳ ವಿಭಾಗ ಸಂಚಾಲಕ ಭುಜಂಗ ಕುಲಾಲ್, ವಿಹಿಂಪನ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಉಪಾಧ್ಯಕ್ಷರಾದ ಹರೀಶ್ ಕುಮಾರ್ ಶೇಟ್, ರತೀಂದ್ರನಾಥ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಸಹ ಕಾರ್ಯದರ್ಶಿ ರವಿ ಅಸೈಗೋಳಿ, ಮಾತೃಶಕ್ತಿಯ ಜಿಲ್ಲಾ ಸಹ ಪ್ರಮುಖರಾದ ಸುಜಾತಾ ಕಂದಾವರ ಪದವು, ಶಾರದಮ್ಮ, ಬಜರಂಗದಳ ಸಹ ಸಂಚಾಲಕ ನವೀನ್ ಮೂಡುಶೆಡ್ಡೆ, ಸಂಸ್ಕಾರ ಭಾರತಿಯ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಪಾಲ್ಗೊಂಡಿದ್ದರು.