26-27: ಉಡುಪಿ ಜಿಲ್ಲಾ ಮಟ್ಟದ ಕೊರಗರ ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ
ಉಡುಪಿ, ಫೆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಕೊರಗ ಸಂಘಟನೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಕೊರಗರ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಫೆ.26 ಮತ್ತು 27ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಫೆ.26ರಂದು ಸಂಜೆ 5:30ಕ್ಕೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
26ರಂದು ಮುಂಜಾನೆ 9:30ರಿಂದ ಬುಟ್ಟಿ ಹೆಣೆಯುವ ಪ್ರಾತ್ಯಕ್ಷಿಕೆ, ಸಂಜೆ 4:00ರಿಂದ ಕ್ರೀಡಾಪಟುಗಳು ಹಾಗೂ ಕಲಾತಂಡಗಳಿಂದ ಪುರ ಮೆರವಣಿಗೆ, ಸಂಜೆ 7:00ರಿಂದ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ದಿನದಲ್ಲಿ ವಿವಿಧ ಕ್ರೀಡಾಸ್ಪರ್ಧೆಗಳೊಂದಿಗೆ 27ರಂದು ಅಪರಾಹ್ನ 12:00ಕ್ಕೆ ಬಿರು (ಚಿಟ್ಬಿಲ್ ಗುರಿ ಇಡುವ ಸ್ಪರ್ಧೆ) ಸ್ಪರ್ಧೆ ನಡೆಯಲಿದೆ. ಅದೇ ದಿನ ಸಂಜೆ 4ಕ್ಕೆ ಸಮಾರೋಪ ಹಾಗೂ ಬಹುಮಾನ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.







